ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಕಡಿಮೆ ಫಲಿತಾಂಶಗಳು ಬಂದಲ್ಲಿ ಪ್ರಾಂಶುಪಾಲರು, ಉಪನ್ಯಾಸಕರೇ ಹೊಣೆ
ರಾಜ್ಯದ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಪಾಲಿಟೆಕ್ನಿಕ್ ಕಾಲೆಜುಗಳಲ್ಲಿ ಶೇ.50ರಷ್ಟು ವಿದ್ಯಾರ್ಥಿಗಳು ಅನುತ್ತೀರ್ಣರಾದರೆ ಆಯಾ ಕಾಲೇಜಿನ ಪ್ರಾಂಶುಪಾಲರು ಹಾಗೂ ಇತರ ಪ್ರಾದ್ಯಾಪಕರು ಹೊಣೆ ಎಂದು ಸರ್ಕಾರ ಎಚ್ಚರಿಸಿದೆ.
ಹೌದು. ರಾಜ್ಯದ ಪಾಲಿಟೆಕ್ನಿಕ್ ಕಾಲೇಜುಗಳು ನಡೆಸುತ್ತಿರುವ ಡಿಪ್ಲೋಮಾ ಕೋರ್ಸ್ ಗಳ ಗುಣಮಟ್ಟ ಹಾಗೂ ಪರಿಕ್ಷಾ ಫಲಿತಾಂಶವನ್ನು ಉತ್ತಮಗೊಳಿಸಲು ಸರ್ಕಾರ ಹೊಸ ಮಾರ್ಗಸೂಚಿ ರೂಪಿಸಿದೆ. ಈ ಮಾರ್ಗಸೂಚಿ ಪ್ರಕಾರ ಯಾವುದೇ ಪಾಲಿಟೆಕ್ನಿಕ್ ನಲ್ಲಿ ಶೇ.50ರಷ್ಟು ವಿದ್ಯಾರ್ಥಿಗಳು ಅನುತ್ತೀರ್ಣರಾದರೆ ಅದಕ್ಕೆ ಆಯಾ ಕಾಲೇಜುಗಳ ಪ್ರಾಂಶುಪಾಲರು, ಬೋಧಕ ಸಿಬ್ಬಂದಿಗಳೇ ನೇರ ಹೊಣೆಯಾಗುತ್ತಾರೆ.
ಅಷ್ಟೇ ಅಲ್ಲ, ಉಪನ್ಯಾಸಕರು ತಾವು ಬೋಧಿಸುವ ವಿಷಯಗಳಲ್ಲಿ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಫಲಿತಾಂಶ ಬಾರದಿದ್ದಲ್ಲಿ ಆಯಾ ಉಪನ್ಯಾಸಕರೇ ಹೊಣೆ ಹೊರಬೇಕಾಗುತ್ತದೆ.
ಅಂತಹ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ವಿರುದ್ಧ ಶಿಸ್ತುಕ್ರಮ ಜರುಗಿಸಿ, ವಾರ್ಷಿಕ ವೇತನ ಬಡ್ತಿ ಮತ್ತು ಮುಂಬಡ್ತಿ ತಡೆ ಹಿಡಿಯುವಂತೆ ತಾಂತ್ರಿಕ ಶಿಕ್ಷಣ ಇಲಾಖೆಯ ಎಲ್ಲಾ ಜಂಟಿ ನಿರ್ದೇಶಕರುಗಳಿಗೆ ಸರ್ಕಾರ ಆದೇಶ ನೀಡಿದೆ. ಈ ಹಿನ್ನಲೆಯಲ್ಲಿ ಮಾರ್ಗಸೂಚಿ ಪಾಲಿಸದ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಮಾಹಿತಿಯನ್ನು ಅವರವರ ವಾರ್ಷಿಕ ಕಾರ್ಯನಿರ್ವಹಣಾ ವರದಿಯಲ್ಲಿ ಸೇರಿಸುವಂತೆ ಸೂಚಿಸಿ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದೆ.
ಮಾರ್ಗಸೂಚಿಯಲ್ಲಿನ ಅಂಶಗಳು:
* ರಾಜ್ಯದ ಎಲ್ಲಾ ಪಾಲಿಟೆಕ್ನಿಕ್ ಗಳಲ್ಲಿ ಆಯಾಕಾಲೇಜುಗಳ ಪ್ರಾಂಶುಪಾಲರು ತಮ್ಮ ಅಧ್ಯಕ್ಷತೆಯಲ್ಲಿ ಕೆಲ ಉಪನ್ಯಾಸಕರನ್ನು ಒಳಗೊಂಡ ಸಮಿತಿ ರಚಿಸಬೇಕು.
* ಸಮಿತಿ ತಿಂಗಳಿಗೊಮ್ಮೆ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಕಿರುಪರೀಕ್ಷೆಗಳ ಫಲಿತಾಂಶಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟದ ಬಗ್ಗೆ ಅವಲೋಕನ ನಡೆಸಿ, ಸಂಬಂಧಿಸಿದ ಉಪನ್ಯಾಸಕರಿಂದ ವರದಿ ಪಡೆಯಬೇಕು.
* ವಿದ್ಯಾರ್ಥಿಗಳಿಗೆ ಪರಿಕ್ಷೆಗಳಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಲು ಮಾರ್ಗದರ್ಶನ ನೀಡಬೇಕು.
* ಶೈಕ್ಷಣಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ವಿಶೇಷ ತರಗತಿಗಳನ್ನು ಹಾಗೂ ಸಂವಹನ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು.
* ಉಪನ್ಯಾಸಕರು ತಾವು ಬೋಧಿಸುವ ವಿಷಯದಲ್ಲಿ ಕನಿಷ್ಠ ಶೇ.50ರಷ್ಟು ಫಲಿತಾಂಶ ಬರುವಂತೆ ನೋಡಿಕೊಳ್ಳಬೇಕು.
* ಉಪನ್ಯಾಸಕರ ಕಾರ್ಯಕ್ಷಮತೆ ಹಾಗೂ ಕಾಲೇಜಿನಲ್ಲಿ ಉತ್ತಮ ಫಲಿತಾಂಶ ಬರುವಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರಾಂಶುಪಾಲರದ್ದು.