ಬೆಂಗಳೂರು : 2011ರ ಕೆಪಿಎಸ್ ಸಿ ನೇಮಕಾತಿ ರದ್ದು ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯದ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಭ್ಯರ್ಥಿಗಳ ಪರ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ.
2011ರಲ್ಲಿ ಆಯ್ಕೆಯಾದ 362 ಗೆಜೆಟೆಡ್ ಪ್ರೊಬೇಷನರಿ (ಕೆಪಿಎಸ್ ಸಿ) ಅಭ್ಯರ್ಥಿಗಳ ನೇಮಕಾತಿಯನ್ನು ರದ್ದುಗೊಳಿಸಿ, ಎಲ್ಲಾ ಅಭ್ಯರ್ಥಿಗಳಿಗೂ ಮರುಪರೀಕ್ಷೆ ನಡೆಸುವಂತೆ ಆ.7ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ನಿರ್ಧಾರ ಹೊರಬೀಳುತ್ತಿದ್ದಂತೆಯೇ ನೊಂದ ಅಭ್ಯರ್ಥಿಗಳ ಆಕ್ರೋಶ ಭುಗಿಲೆದ್ದಿದೆ. ಹಲವು ಅಭ್ಯರ್ಥಿಗಳು ಆತ್ಮಹತ್ಯೆಗೂ ಕೂಡ ಯತ್ನಿಸಿದ್ದಾರೆ. ರಾಜ್ಯ ಸರ್ಕಾದ ನಿರ್ಧಾರಕ್ಕೆ ಪಕ್ಷಾತೀತ ಖಂಡನೆ ವ್ಯಕ್ತವಾಗಿದೆ.
ಈ ನಡುವೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ಸರ್ಕಾರದ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದರು. ಆ.8ರಂದು ಬೆಳಿಗ್ಗೆ 10ಗಂಟೆಯೊಳಗೆ ಸರ್ಕಾರ ತನ್ನ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಗಡುವು ನೀಡಿದ್ದರು.
ಆದರೆ ಬೆಳಿಗ್ಗೆ 10ಗಂಟೆಯಾದರೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನಲೆಯಲ್ಲಿ ನೊಂದ ಅಭ್ಯರ್ಥಿಗಳ ಪರವಾಗಿ ಬೆಳಿಗ್ಗೆ 11.30ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಲು ನಿರ್ಧರಿಸಿದ್ದಾರೆ. ಕೆಲವರ ರಕ್ಷಣೆಗಾಗಿ ಸರ್ಕಾರ ತೆಗೆದುಕೊಂಡ ಈ ನಿರ್ಧಾರ ಖಂಡನೀಯ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.
2011ರ ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ಸರ್ಕಾರದ ಆದೇಶವನ್ನು ಖಂಡಿಸಿ ಅಭ್ಯರ್ಥಿಗಳು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.