ಇಸ್ಲಾಮಾಬಾದ್ : ತಮ್ಮ ದೇಶ ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಿಲ್ಲದೇ ಇರುವುದಕ್ಕೆ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಭಾರತದೊಂದಿಗೆ ಉತ್ತಮ ಬಾಂಧವ್ಯ ಬೆಳೆಸಲು ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಾಕಿಸ್ತಾನದಲ್ಲಿ ನಡೆದ ರಾಷ್ಟ್ರೀಯ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ನವಾಜ್ ಷರೀಫ್, ಪಾಕಿಸ್ತಾನ, ಭಾರತದೊಂದಿಗೆ ಉತ್ತಮ ಸಂಬಂಧ ಹೊಂದಿಲ್ಲದೇ ಇರುವುದನ್ನು ಪ್ರಸ್ತಾಪಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಮ್ಮೇಳನದಲ್ಲಿ ಐ.ಎಸ್.ಐ ನ ಮುಖ್ಯಸ್ಥ ಲೆಫ್ಟಿನೆಂಟ್ ಗವರ್ನರ್ ಜಹೀರುಲ್ ಇಸ್ಲಾಂ, ಸೇರಿದಂತೆ ಹಲವರು ಉಪಸ್ಥಿತರಿದ್ದರು. ಭಾರತದೊಂದಿಗೆ ಉತ್ತಮ ಸಂಬಂಧ ಬೆಳೆಸಲು ಇದು ಸರಿಯಾದ ಸಮಯ ಎಂದು ಷರೀಫ್ ತಿಳಿಸಿದ್ದಾರೆ.
ಅಫ್ಘಾನಿಸ್ತಾನದೊಂದಿಗೂ ಸೌಹಾರ್ದಯುತ ಸಂಬಂಧ ಮುಂದುವರೆಸುವ ಬಗ್ಗೆ ಒಲವು ವ್ಯಕ್ತಪಡಿಸಿರುವ ಷರೀಫ್, ಅಲ್ಲಿನ ಹೊಸ ನಾಯಕತ್ವದಿಂದ ಸಕಾರಾತ್ಮಕ ಸ್ಪಂದನೆ ದೊರೆಯಲಿದೆ ಎಂಬ ವಿಸ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಭಯೋತ್ಪಾದನೆಯನ್ನು ಮಟ್ಟ ಹಾಕುವ ಬಗ್ಗೆಯೂ ನವಾಜ್ ಷರೀಫ್ ಭರವಸೆ ನೀಡಿದ್ದಾರೆ.
ಭಾರತಕ್ಕೆ ಭೇಟಿ ನೀಡುವುದಕ್ಕೂ ಐ.ಎಸ್.ಐ ಅನುಮತಿ ಪಡೆಯುವ ಸ್ಥಿತಿಯಲ್ಲಿರುವ ಪಾಕ್ ಪ್ರಧಾನಿ ನವಾಜ್ ಷರೀಫ್, ಐ.ಎಸ್.ಐ ಮುಖ್ಯಸ್ಥರ ಸಮ್ಮುಖದಲ್ಲೇ ತಮ್ಮ ದೇಶ ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವುದು ಅಚ್ಚರಿ ಮೂಡಿಸಿದೆ.