ಬೆಂಗಳೂರು : 2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಸರ್ಕಾರ ಅಕ್ರಮವೆಸಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪಕ್ಕೆ ಸಿದ್ದರಾಮಯ್ಯ ಉತ್ತರಿಸಿದರು. ಈಗಾಗಲೇ 28 ದಿನಗಳ ಕಾಲ ಅಧಿವೇಶನ ನಡೆಸಲಾಗಿದೆ. ಹೀಗಾಗಿ ಮತ್ತೆ ವಿಶೇಷ ಅಧಿವೇಶನ ಕರೆಯುವ ಅಗತ್ಯವಿಲ್ಲ ಎಂದು ತಿಳಿಸಿದರು.
2011ರ ಗೆಜೆಟೆಡ್ ಪ್ರೊಬೇಷನರಿ ಆಯ್ಕೆಯಲ್ಲಿ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಅವರ ಸಂಬಂಧಿ ಆಯ್ಕೆಯಾಗಿಲ್ಲ ಎಬ ಕಾರಣಕ್ಕೆ ನೇಮಕಾತಿ ರದ್ದುಮಾಡಲಾಗಿದೆ ಎಂಬ ಆರೋಪ ಸುಳ್ಳು. ಈ ಬ್ಯಾಚ್ ನಲ್ಲಿ ಕೆಂಪಯ್ಯ ಅವರ ಸಂಬಂಧಿ ಯಾರೆಂಬುದೇ ತಮಗೆ ಗೊತ್ತಿಲ್ಲ ಎಂದರು.
ಹೆಚ್.ಡಿ.ಕುಮಾರಸ್ವಾಮಿಯವರು ಹಲವು ಅಭ್ಯರ್ಥಿಗಳಿಗೆ ಶಿಫಾರಸ್ಸು ಮಾಡಿರಬಹುದು. ಅವರು ಶಿಫಾರಸು ಮಾಡಿದ ಅಭ್ಯರ್ಥಿಗಳು ಆಯ್ಕೆಯಾಗಿರಬಹುದು. ಹೀಗಾಗಿ ಅವರು ಅಭ್ಯರ್ಥಿಗಳ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಕುಮಾರಸ್ವಾಮಿಯವರಿಗೆ ಸರ್ಕಾರದ ಆದೇಶಗಳ ಬಗ್ಗೆ ಆಕ್ಷೇಪಗಳಿದ್ದರೆ ಹೈಕೋರ್ಟ್ ನಲ್ಲಿ ಪ್ರಶ್ನಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೆಪಿಎಸ್ ಸಿ ನೇಮಕಾತಿ ರದ್ದು ಆದೇಶ ವಾಪಸ್ ಪಡೆಯುವಂತೆ ಆಗ್ರಹಿಸಿ ಅಭ್ಯರ್ಥಿಗಳು ಒಂದೆಡೆ ಪ್ರತಿಭಟನೆ ನಡೆಸುತ್ತಿದ್ದರೆ ಇತ್ತ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಮುಖ್ಯಮಂತ್ರಿಗಳಿಬ್ಬರೂ ಹಗರಣದ ಬಗ್ಗೆ ಸವಾಲು-ಪ್ರತಿಸವಾಲು ಹಾಕಿ ರಾಜಕೀಯ ಮಾಡುತ್ತಿದ್ದಾರೆ. ಸಮಸ್ಯೆಯ ಬಗ್ಗೆ ಗಂಭೀರವಾಗಿ ಚರ್ಚಿಸಿ, ಬಗೆಹರಿಸುವುದನ್ನು ಬಿಟ್ಟು ಈರೀತಿ ಮಾಡುವುದರಿಂದ ಇದರಿಂದ ಅಭ್ಯರ್ಥಿಗಳಿಗಾಗುವ ಪ್ರಯೋಜನವೇನು ಎಂಬುದು ಪ್ರಶ್ನೆ.