ನವದೆಹಲಿ : 'ನರೇಂದ್ರ ಮೋದಿ' ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ದೇಶದಲ್ಲಿ ಕೋಮುಗಲಭೆಗಳು ಹೆಚ್ಚಾಗುತ್ತಿವೆ ಎಂದು ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತೆ ಆರೋಪ ಮಾಡಿದ್ದಾರೆ.
ಆ.13ರ ಸಂಸತ್ ಅಧಿವೇಶನ ಆರಂಭವಾಗುತ್ತಿದ್ದಂತೆಯೇ ದೇಶದಲ್ಲಿ ನಡೆಯುತ್ತಿರುವ ಕೋಮುಗಲಭೆಗಳ ಬಗ್ಗೆ ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯರು ಈ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ಸ್ಪೀಕರ್ ಸುಮಿತ್ರಾ ಮಹಾಜನ್ ಅವರನ್ನು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಂದ ನಂತರ ದೇಶದಲ್ಲಿ ಕೋಮುಗಲಭೆ ಹೆಚ್ಚಾಗತೊಡಗಿದೆ. ಇದಕ್ಕೆ ಬಿಜೆಪಿ ಸದಸ್ಯರೇ ಕಾರಣ ಎಂದು ವಾಗ್ದಾಳಿ ನಡೆಸಿದರು. ಬೇಧರಾಜಕೀಯವನ್ನು ಕಾಂಗ್ರೆಸ್ ಎಂದಿಗೂ ಸಹಿಸುವುದಿಲ್ಲ ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ.
ಸೋನಿಯಾ ಗಾಂಧಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು, ನಾವು ಎಂದಿಗೂ ಓಟ್ ಬ್ಯಾಂಕ್ ರಾಜಕಾರಣ ಮಾಡುವುದಿಲ್ಲ, ಓಟ್ ಬ್ಯಾಂಕ್ ಭದ್ರಪಡಿಸಿಕೊಳ್ಳಲು ಕೋಮುಗಲಭೆಗಳಿಗೆ ಪ್ರಚೋದನೆ ನೀಡುತ್ತಿರುವುದು ಕಾಂಗ್ರೆಸ್ ನವರು ಎಂದು ಪ್ರತ್ಯಾರೋಪ ಮಾಡಿದ್ದಾರೆ. ಈ ವೇಳೆ ಬಿಜೆಪಿ ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದೆ.
ಕೋಮುಗಲಭೆ ವಿಷಯ ಚರ್ಚೆಗೂ ಮುನ್ನ, ಸಂಸತ್ ನಲ್ಲಿ ಅಂಗೀಕಾರವಾಗಬೇಕಿರುವ ಕೆಲವು ಪ್ರಮುಖ ಮಸೂದೆಗಳ ಬಗ್ಗೆ ಮೊದಲು ಚರ್ಚೆ ನಡೆಸಬೇಕೆಂದು ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ. ಪಟ್ಟು ಬಿಡದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.