ಬೆಂಗಳೂರು : 2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿವಾದ ಸಧ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಸಂಘರ್ಷ, ಆರೋಪ-ಪ್ರತ್ಯಾರೋಪ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಕೆಪಿಎಸ್ ಸಿ ನೇಮಕಾತಿ ರದ್ದು ಮಾಡುವ ಅಧಿಕಾರ ಸರ್ಕಾರಕ್ಕೆ ಇಲ್ಲ. ದೇಶದ ಸಂವಿಧಾನದ ಬಗ್ಗೆ ತಿಳಿದು ನಿರ್ಧಾರ ಕೈಗೊಳ್ಳಲಿ ಎಂದು ತಿಳಿಸಿದರು.
ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಒಬ್ಬ ಮಹಾನ್ ಸುಳ್ಳುಗಾರ. ಹೆಚ್.ಎನ್.ಕೃಷ್ಣ ಅವರನ್ನು ಕೆಪಿಎಸ್ ಸಿ ಸದಸ್ಯರನ್ನಾಗಿ ನೇಮಕ ಮಾಡಿದ್ದು ಕುಮಾರಸ್ವಾಮಿಯವರೇ ಎಂಬ ಹೇಳಿಕೆ ನೀಡಿದ್ದಾರೆ. ಹೆಚ್.ಎನ್.ಕೃಷ್ಣ ಅವರನ್ನು ನೇಮಕ ಮಾಡಿದ್ದು ಕಾಗ್ರೆಸ್ ಆಡಳಿತದ ಅವಧಿಯಲ್ಲಿ ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಹೆಚ್.ಎನ್.ಕೃಷ್ಣ ಕೆಪಿಎಸ್ ಸಿ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಆದರೆ ಈಗ ಮುಖ್ಯಮಂತ್ರಿಗಳು ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಮೊದಲಿನಿಂದಲೂ ಸಿದ್ದರಾಮಯ್ಯ ಭ್ರಷ್ಟರಿಗೆ ಮಣೆ ಹಾಕುತ್ತಿದ್ದರು. ಅವರ ಬಗ್ಗೆ ನನಗೆ ಎಲ್ಲವೂ ಗೊತ್ತಿದೆ. ಭ್ರಷ್ಟರನ್ನು ಕೆಪಿಎಸ್ ಸಿ ಅಧ್ಯಕ್ಷರನ್ನಾಗಿ ಮಾಡುವಂತೆ ಸಿದ್ದರಾಮಯ್ಯ ಲಾಭಿ ನಡೆಸಿದ್ದರು. ಸಿದ್ದರಾಮಯ್ಯ ಲಾಭಿಗೆ ಅಂದಿನ ಮುಖ್ಯಮಂತ್ರಿ ಜೆ.ಹೆಚ್.ಪಟೇಲ್ ವಿರೋಧ ವ್ಯಕ್ತಪಡಿಸಿದ್ದರು. ಮುಕುಡಪ್ಪ ಅವರನ್ನು ಕೆಪಿಎಸ್ ಸಿ ಸದಸ್ಯರನ್ನಾಗಿ ಮಾಡುವಂತೆ ಸಿದ್ದರಾಮಯ್ಯನವರೇ ಒತ್ತಡ ಹೇರಿದ್ದರು. ಆದರೆ ಆರು ತಿಂಗಳ ಕಾಲ ಸಮ್ಮತಿ ನೀಡಿರಲಿಲ್ಲ. ಈಗ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಸಿದ್ದರಾಮಯ್ಯ ಶುದ್ಧರಂತೆ ಮಾತನಾಡುತ್ತಾರೆ. ಸಿದ್ದರಾಮಯ್ಯನವರಿಗೆ ನೈತಿಕತೆ ಇದ್ದರೆ ಮುಕುಡಪ್ಪ ಅವರ ವಿರುದ್ಧ ತನಿಖೆ ನಡೆಸಲಿ ಎಂದರು.
ಕೆಪಿಎಸ್ ಸಿ 9 ಸದಸ್ಯರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡುವುದಾಗಿ ಹೇಳಿರುವ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರಿಗೆ ಕಾನೂನಿನ ಬಗ್ಗೆ ಅರಿವಿದೆಯೇ ಎಂದು ಪ್ರಶ್ನಿಸಿರುವ ಅವರು, ಕೆಪಿಎಸ್ ಸಿ ಸಾಂವಿಧಾನಿಕ ಸಂಸ್ಥೆ. ಅದರ ವಿರುದ್ಧ ಕ್ರಮ ಕೈಗೊಳ್ಳಲು ಇವರಿಗೆ ಅಧಿಕಾರವಿದೆಯೇ? ಸರ್ಕಾರಕ್ಕೆ ಹೃದಯವಂತಿಕೆಯಿದ್ದರೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಿ ಎಂದು ಆಗ್ರಹಿಸಿದರು.