ನವದೆಹಲಿ : 'ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ' ಮಸೂದೆಗೆ ಆ.13ರಂದು ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ.
ಕೊಲಿಜಿಯಂ ವ್ಯವಸ್ಥೆಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇಮಕಕ್ಕೆ ಆರು ಸದಸ್ಯರ ಸಮಿತಿ ರಚನೆ ಸಂಬಂಧ ಮೋದಿ ನೇತೃತ್ವದ ಸರ್ಕಾರ ಸೋಮವಾರ ನ್ಯಾಯಾಂಗ ನೇಮಕಾತಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿತ್ತು. ಸುದೀರ್ಘ ಚರ್ಚೆ ನಡೆದ ನಂತರ ಮಸೂದೆಯನ್ನು ಅಂಗೀಕರಿಸಲಾಗಿದೆ.
ನ್ಯಾಯಾಂಗ ವಿಚಾರದಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ. ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವುದು ನಮ್ಮ ಉದ್ದೇಶವಾಗಿದೆ ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಲೋಕಸಭೆಯಲ್ಲಿ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಬಿಜೆಪಿ ಬಹುಮತದ ಸಮಸ್ಯೆ ಎದುರಿಸುತ್ತಿದೆ. ಇದೇ ವೇಳೆ ಕಾಂಗ್ರೆಸ್ ನ್ಯಾಯಾಂಗ ನೇಮಕಾತಿ ಮಸೂದೆಗೆ ವಿರೋಧ ವ್ಯಕ್ತಪಡಿಸುವ ಸಾಧ್ಯತೆ ಇದೆ.
ನ್ಯಾಯಾಂಗ ವ್ಯವಸ್ಥೆಯಲ್ಲಿ ರಾಜಕೀಯ ಹಸ್ತಕ್ಷೇಪ ಮತ್ತು ಭ್ರಷ್ಟಾಚಾರ ನಡೆದಿರುವುದರ ಬಗ್ಗೆ ಭಾರತೀಯ ಪತ್ರಿಕಾ ಮಂಡಳಿಯ ಅಧ್ಯಕ್ಷ ನ್ಯಾ.ಮಾರ್ಕಾಂಡೇಯ ಕಾಟ್ಜು ನೀಡಿದ್ದ ಹೇಳಿಕೆ ನಂತರ ಕೊಲಿಜಿಯಂ ವ್ಯವಸ್ಥೆ ಬದಲಾವಣೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ.
ಭ್ರಷ್ಟಾಚಾರ ಆರೋಪ ಹೊತ್ತಿದ್ದ ಮದ್ರಾಸ್ ಹೈಕೋರ್ಟ್ ನ ಹೆಚ್ಚುವರಿ ಜಡ್ಜ್ ಒಬ್ಬರ ಅಧಿಕಾರಾವಧಿ ವಿಸ್ತರಣೆಯಲ್ಲಿ ಸುಪ್ರೀಂಕೋರ್ಟ್ ನ ಮೂವರು ನಿವೃತ್ತ ನ್ಯಾಯಮೂರ್ತಿಗಳು ಭಾಗಿಯಾಗಿದ್ದಾರೆ. ರಾಜಕೀಯ ಒತ್ತಡಕ್ಕೆ ನ್ಯಾಯಮೂರ್ತಿಗಳು ಬಲಿಯಾಗಿದ್ದಾರೆ ಎಂದು ಭಾರತೀಯ ಪತ್ರಿಕಾ ಮಂಡಳಿ ಅಧ್ಯಕ್ಷ ನ್ಯಾ. ಮಾರ್ಕಾಂಡೇಯ ಕಾಟ್ಜು ಗಂಭೀರ ಆರೋಪ ಮಾಡಿದ್ದರು.