ಬೆಂಗಳೂರು : 'ಜೆಡಿಎಸ್' ನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಸ್ವತಃ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರೇ ಒಪ್ಪಿಕೊಂಡಿದ್ದಾರೆ. ತಮ್ಮ ಪಕ್ಷದಲ್ಲಿ ಗೊಂದಲ ಇರುವುದು ನಿಜ, ಪಕ್ಷ ಉಳಿಸುವವರು ಮಾತ್ರ ಮುಂದುವರೆಯಲಿ ಎಂದು ಹೇಳಿದ್ದಾರೆ.
ಆ.17ರಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೇವೇಗೌಡರು, ರಾಜ್ಯದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಿವೆ ಜೆಡಿಎಸ್ ತೊರೆಯುವವರು ಯಾವುದೇ ನಿರ್ಧಾರ ಕೈಗೊಳ್ಳಲು ಸ್ವತಂತ್ರರಾಗಿದ್ದಾರೆ, ಪಕ್ಷಕ್ಕಾಗಿ ದುಡಿಯುವವರು ಮಾತ್ರ ಜೆಡಿಎಸ್ ನಲ್ಲೇ ಉಳಿಯಲಿ ಎಂದು ಹೇಳಿದ್ದಾರೆ.
ಇದೇ ವೇಳೆ ಖಾಸಗಿ ಮಾಧ್ಯಮಕ್ಕೆ ಸಂದರ್ಶನ ನೀಡಿರುವ ಹೆಚ್.ಡಿ ಕುಮಾರಸ್ವಾಮಿ, ಉಪಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಶಿಕಾರಿಪುರದಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡುವುದಿಲ್ಲ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರು ಸ್ವತಂತ್ರರು, ಅವರು ಯಾವ ಪಕ್ಷಕ್ಕಾದರೂ ಮತ ಚಲಾವಣೆ ಮಾಡಬಹುದು ಎಂದು ತಿಳಿಸಿದ್ದಾರೆ. ಈ ಹೇಳಿಕೆ ರಾಜಕೀಯವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕಾರಿಪುರ ಹೊರತುಪಡಿಸಿ ಬೇರೆಲ್ಲೂ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದರೆ ಇತ್ತ ಹೆಚ್.ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ನೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿಲ್ಲ ಎಂದು ಹೇಳಿಕೆ ನೀಡಿರುವುದು ರಾಜ್ಯದ ಜನತೆಯನ್ನು ಗೊಂದಲಕ್ಕೀಡುಮಾಡಿದೆ.
ಏತನ್ಮಧ್ಯೆ ಹೆಚ್.ಡಿ ದೇವೇಗೌಡರು ಜೆಡಿಎಸ್ ನಲ್ಲಿ ಗೊಂದಲವಿದೆ ಎಂದು ಹೇಳಿರುವುದು ಪಕ್ಷದಲ್ಲಿ ಕುಮಾರಸ್ವಾಮಿ, ದೇವೇಗೌಡರ ನಡುವೆ ಭಿನ್ನಾಭಿಪ್ರಾಯವಿರುವುದನ್ನು ಸಾಬೀತುಪಡಿಸುವಂತಿದೆ. ಒಟ್ಟಾರೆ ಜೆಡಿಎಸ್ ಗೊಂದಲದ ಗೂಡಾಗಿ ಪರಿಣಮಿಸಿದೆ.