ರಾಮನಗರ : ನಿತ್ಯಾನಂದ ಪುರುಷತ್ವ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ನಿತ್ಯಾನಂದ ಹಾಗೂ ಆತನ ಶಿಷ್ಯಂದಿರು ರಾಮನಗರ ಸಿಜೆಎಂ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರುಷತ್ವ ಪರೀಕ್ಷೆ ವಿಚಾರವಾಗಿ ನಿತ್ಯಾನಂದ ಹಾಗೂ ಆತನ 6 ಜನ ಶಿಷ್ಯಂದಿರು ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆ.20ರಂದು ನಿತ್ಯಾನಂದ ಸಲ್ಲಿಸಿರುವ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿರುವ ಹಿನ್ನಲೆಯಲ್ಲಿ ರಾಮನಗರ ನ್ಯಾಯಾಲಯ ವಿಚಾರಣೆಯನ್ನು ಆ.23ಕ್ಕೆ ಮುದೂಡಿದೆ.
ರಾಸಲೀಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಹಾಗೂ ಪುರುಷತ್ವಪರೀಕ್ಷೆ ಸಂಬಂಧ ವಿಚಾರಣೆಗೆ ಗೈರು ಹಾಜರಾದ ಹಿನ್ನಲೆಯಲ್ಲಿ ನಿತ್ಯಾನಂದ ಸ್ವಾಮಿ ಹಾಗೂ ಆತನ ನಾಲ್ವರು ಅನುಯಾಯಿಗಳ ವಿರುದ್ಧ ರಾಮನಗರ ಸಿಜೆಎಂ ನ್ಯಾಯಾಲಯ ಇತ್ತೀಚೆಗೆ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು. ಈ ಆದೇಶ ಪ್ರಶ್ನಿಸಿ ನಿತ್ಯಾನಂದ ಹಾಗೂ ಆತನ ನಾಲ್ವರು ಅನುಯಾಯಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ನಿತ್ಯಾನಂದ ವಿರುದ್ಧದ ಜಾಮೀನು ರಹಿತ ವಾರಂಟ್ ರದ್ದುಗೊಳಿಸಿ ಪುರುಷತ್ವ ಪರೀಕ್ಷೆಗೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಿತ್ತು.
ತನ್ನ ವಿರುದ್ಧ ಪುರುಷತ್ವ ಪರೀಕ್ಷೆಗೆ ತಡೆ ನೀಡುವಂತೆ ಕೋರಿ ನಿತ್ಯಾನಂದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಆ.18ರಂದು ವಿಚಾರಣೆಗೆ ರಾಮನಗರ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಿತ್ತು. ಅಲ್ಲದೇ ಪದೇ ಪದೇ ವಿಚಾರಣೆಯಿಂದ ತಪ್ಪಿಸಿಕೊಳ್ಳುವುದು ಸರಿಯಲ್ಲ ಎಂದು ತಾಕೀತು ಮಾಡಿತ್ತು. ವಿಚಾರಣೆಯನ್ನು ಆ.20ಕ್ಕೆ ಮುಂದೂಡಲಾಗಿತ್ತು.