ನವದೆಹಲಿ : 'ಸಂವಿಧಾನ'ದ 370ನೇ ವಿಧಿ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿರುವ ಹಿನ್ನೆಲೆಯಲ್ಲಿ ಆ.19ರಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೊಟೀಸ್ ಜಾರಿ ಮಾಡಿದೆ.
ಜಮ್ಮು-ಕಾಶ್ಮೀರದಲ್ಲಿ ಆಸ್ತಿ ಖರೀದಿ, ನೌಕರಿಗಳಿಂದ ಭಾರತದ ಇತರೆ ರಾಜ್ಯಗಳ ನಾಗರಿಕರನ್ನು ವಂಚಿತರನ್ನಾಗಿ ಮಾಡಿರುವ ಸಂವಿಧಾನದ 370ನೇ ವಿಧಿಯನ್ನು ಪ್ರಶ್ನಿಸಿ ನವದೆಹಲಿ ಮೂಲದ ಎನ್.ಜಿ.ಒ ಸುಪ್ರೀಂ ಕೋರ್ಟ್ ಗೆ ಪಿ.ಐ.ಎಲ್ ಸಲ್ಲಿಸಿತ್ತು. ಅಲ್ಲದೇ 370ನೇ ವಿಧಿಯಿಂದಾಗಿ ಜಮ್ಮು-ಕಾಶ್ಮೀರ ಸರ್ಕಾರ, ಸಂವಿಧಾನದ ವಿರುದ್ಧವಾಗಿ ಯಾವುದೇ ಕಾನೂನನ್ನು ಜಾರಿ ಮಾಡಿದರೂ ಅದನ್ನು ಪ್ರಶ್ನಿಸಲು ಸಾಧ್ಯವಾಗದಂತಾಗಿರುವುದನ್ನೂ ಪಿ.ಐ.ಎಲ್ ನಲ್ಲಿ ಪ್ರಶ್ನಿಸಲಾಗಿತ್ತು.
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯನ್ನು ರದ್ದುಗೊಳಿಸಬೇಕೆಂಬ ಕೂಗು ದೇಶಾದ್ಯಂತ ಮೊಳಗಿದ್ದು, ಎನ್.ಡಿ.ಎ ಸರ್ಕಾರ ಈ ಬಗ್ಗೆ ಕ್ರಮಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿತ್ತು.
2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ, ಜಮ್ಮು-ಕಾಶ್ಮೀರಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನವನ್ನು ಹಿಂಪಡೆಯಲಾಗುವುದು ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ 370ನೇ ವಿಧಿ ರದ್ದುಗೊಳಿಸುವ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ 370ನೇ ವಿಧಿ ಬಗ್ಗೆ ಈ ವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ.