ಬೆಂಗಳೂರು : ಪಡಿತರ ವ್ಯವಸ್ಥೆ ಮೂಲಕ ವಿತರಿಸುವ ಅಕ್ಕಿಯಲ್ಲಿ ಹುಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಆಹಾರ ಇಲಾಖೆಯ ಆಯುಕ್ತರು, ನಿರ್ದೇಶಕರು, ಸಚಿವರ ಜತೆ ಸಭೆ ನಡೆಸಿದ ಅವರು, ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಲ್ಲಿ ಹುಳಬಿದ್ದಿರುವ ಅಕ್ಕಿ ವಿತರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅಧಿಕಾರಿಗಳ ಬೇಜವಾಬ್ದಾರಿತಾನವೇ ಇದಕ್ಕೆ ಕಾರಣ ಎಂದು ತರಾಟೆಗೆ ತೆಗೆದುಕೊಡರು.
ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳಸಾಗಣೆಯಾಗುತ್ತಿದ್ದು, ಅದೇ ಅಕ್ಕಿಗೆ ಪಾಲಿಶ್ ಮಾಡಿ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿಬಂದಿದೆ. ಈ ಬಗ್ಗೆ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳೇನು ಎಂದು ಪ್ರಶ್ನಿಸಿದರು.
ಆಹಾರ ನಿಗಮದಿಂದ ಫಲಾನುಭವಿಗಳಿಗೆ ಅಕ್ಕಿ ತಲುಪುವವರೆಗಿನ ಬಗ್ಗೆ ಕರಾರುವಕ್ಕಾದ ಲೆಕ್ಕವಿರಬೇಕು. ಕಲಬೆರಿಕೆ, ಕಲ್ಲು, ಹುಳವಿರುವ ಅಕ್ಕಿಯನ್ನು ಪೂರೈಸಿದರೆ ಹಾಗೂ ಅಕ್ಕಿ ದುರುಪಯೋಗವಾಗಿರುವ ಪ್ರಕರಣ ಬೆಳಕಿಗೆ ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು.
ಅಲ್ಲದೇ ಅಕ್ಕಿ ಕಳ್ಳಸಾಗಣೆ ಮಾಡುವವರ ಜತೆ ಅಧಿಕಾರಿಗಳು ಕೈಜೋಡಿಸಿದರೆ ಅಂತವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.