ರಾಂಚಿ : ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಿಗೂ ವ್ಯಾಪಿಸಿದ್ದು ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಮುಖ್ಯಮಂತ್ರಿಗಳನ್ನು ಜನತೆ ಸಾರ್ವಜನಿಕವಾಗಿ ಅಪಹಾಸ್ಯ ಮಾಡುತ್ತಿದ್ದಾರೆ.
ಇತ್ತೀಚೆಗಷ್ಟೇ ಹರ್ಯಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ವೇದಿಕೆ ಹಂಚಿಕೊಂಡಿದ್ದ ಅಲ್ಲಿನ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರ ಭಾಷಣಕ್ಕೆ ಸಭೆಯಲ್ಲಿದ್ದ ಕೆಲವರು ಅಡ್ಡಿಪಡಿಸಿ ಅವರನ್ನು ಅಪಹಾಸ್ಯ ಮಾಡಿದ್ದರು. ಇದೀಗ ಇಂತಹುದೇ ಇನ್ನೊಂದು ಘಟನೆ ಜಾರ್ಖಂಡ್ನಲ್ಲಿ ವರದಿಯಾಗಿದೆ.
ಜಾರ್ಖಂಡ್ ನ ರಾಜಧಾನಿ ರಾಂಚಿಯಲ್ಲಿ ಆಯೋಜಿಸಲಾಗಿದ್ದ ಸರ್ಕಾರಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಜೊತೆಗೆ ವೇದಿಕೆ ಹಂಚಿಕೊಂಡಿದ್ದ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ನೆರೆದಿದ್ದ ಜನತೆ ಗೇಲಿ ಮಾಡಿದ ಘಟನೆ ಆ.21ರಂದು ನಡೆದಿದೆ.
ಪ್ರಧಾನಿ ಮೋದಿ ಅವರನ್ನು ಸ್ವಾಗತಿಸುವ ಸಂದರ್ಭದಲ್ಲಿ ಮಾತನಾಡುತ್ತಿದ್ದ ಹೇಮಂತ್ ಸೊರೇನ್ ಅವರನ್ನು ಜನತೆ ಗೇಲಿ ಮಾಡುತ್ತಾ ಸರ್ಕಾರದ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ.
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾದ ಯೋಜನೆಯೊಂದನ್ನು ಉದ್ಘಾಟಿಸುವ ಹಿನ್ನೆಲೆಯಲ್ಲಿ ಜಾರ್ಖಂಡ್ ಗೆ ನರೇಂದ್ರ ಮೋದಿ ಆಗಮಿಸಿದ್ದರು.