ಶಿಕಾರಿಪುರ : ಶಿಕಾರಿಪುರ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಗೆ ತೀವ್ರ ಮುಖಭಂಗವುಂಟಾಗಿದೆ.
ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 71,547 ಮತಗಳ ಮೂಲಕ ಜಯಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಾಂತವೀರಪ್ಪ ಗೌಡ 65,117ಮತಗಳಿಂದ ಸೋಲನುಭವಿಸಿದ್ದಾರೆ. ಒಟ್ಟು 6,430 ಮತಗಳ ಅಂತರದಿಂದ ಬಿ.ವೈ.ರಾಘವೇಂದ್ರ ಜಭೇರಿಬಾರಿಸಿದ್ದಾರೆ.
ಶಿಕಾರಿಪುರದಲ್ಲಿ ಬಿಜೆಪಿ ಹಣಬಲದ ಮೂಲಕ ಗೆಲುವು ಸಾಧಿಸಿದೆ. ಬಿಜೆಪಿ ಅಭ್ಯರ್ಥಿಪರ ಚುನಾವಣೆವರೆಗೂ ಹಣ ಹಂಚಿದ್ದಾರೆ. ಈ ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಮತ್ತೆ ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಈ ಅನ್ಯಾಯದ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಶಾಂತವೀರಪ್ಪ ಗೌಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೇವಲ ಆರುವರೆ ಸಾವಿರ ಮತಗಳ ಅಂತರದಿಂದ ನಾವು ಸೋತಿದ್ದೇವೆ ಎಂದರೆ ಅದು ಕಾಂಗ್ರೆಸ್ ತಂತ್ರ ಕೆಲಸಮಾಡಿದೆ ಅಂತಲೇ ಅರ್ಥ. ಬಿಜೆಪಿ ಗೆಲುವು ಸಾಧಿಸಿಲ್ಲ. ಬಿಜೆಪಿ ಹಣ ಗೆಲುವು ಸಾಧಿಸಿದೆ ಎಂದರು.
ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಣೇಶ್ ಹುಕ್ಕೇರಿ 94,636 ಮತಗಳ ಮೂಲಕ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕಟವಟಗಿಮಠ 62,816 ಮತಗಳಿಂದ ಹಿನ್ನಡೆ ಸಾಧಿಸಿದ್ದಾರೆ.