ಬೆಂಗಳೂರು : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಂದು ಮಹತ್ವ ಪರೀಕ್ಷೆ ಎದುರಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ಬಿದ್ದಿದ್ದಾರೆ.
ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ಮಹತ್ವದ ಸಮನ್ವಯ ಸಮಿತಿ ಸಭೆ ನಡೆಯಲಿದೆ. ಈಗಾಗಲೇ ಹಲವು ಶಾಸಕರು, ಸಚಿವರು ದಿಗ್ವಿಜಯ್ ಸಿಂಗ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಸಮನ್ವಯ ಸಮಿತಿ ಸಭೆಯಲ್ಲಿ ಸಚಿವ ಸಂಪುಟ ಪುನರಚನೆ ಮಾಡಬೇಕೆ ಅಥವಾ ಸಂಪುಟ ವಿಸ್ತರಣೆ ಮಾಡೇಬೇಕೇ? ಡಿಸಿಎಂ ಹುದ್ದೆ ಸೃಷ್ಟಿಸಬೇಕೇ ಅಥವಾ ಪರಮೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಬೇ ಎಂಬ ಬಗ್ಗೆ ಹಾಗೂ ಒಂದು ವೇಳೆ ಸಂಪುಟ ಪುನರಚನೆ ಮಾಡುವುದಾದರೆ ಕಿಮ್ಮನೆ ರತ್ನಾಕರ್, ಅಂಬರೀಷ್, ಖಮರುಲ್ ಇಸ್ಲಾಂ ಅವರನ್ನು ಸಂಪುಟದಿಂದ ಕೈಬಿಡುವ ಕುರಿತಾಗಿಯೂ ಚರ್ಚೆ ನಡೆಯಲಿದೆ.
ಸಚಿವ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಮಾತ್ರ ಖಾಲಿಯಿದೆ. ಆದರೆ ಆಕಾಂಕ್ಷಿಗಳ ಪಟ್ಟಿ ಮಾತ್ರ ದೊಡ್ಡದಾಗಿದೆ. ಹೆಚ್.ವೈ.ಮೇಟಿಗೆ, ಕೆ.ಬಿ.ಕೋಳಿವಾಡ, ರಾಜಶೇಖರ ಪಾಟೀಲ್ ಹುಮ್ನಾಬಾದ್, ಈಶ್ವರ ಖಂಡ್ರೆ ಮೊದಲಾದವರ ಹೆಸರು ಕೇಳಿಬರುತ್ತದೆ. ಈ ನಡುವೆ ವಿಧಾನಸಭಾ ಸಚೇತಕ ಅಶೋಕ್ ಪಟ್ಟಣ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಹೆಚ್ಚಿದೆ. ಈ ಎಲ್ಲಾ ಕಾರಣದಿಂದಾಗಿ ಸಮನ್ವಯ ಸಮಿತಿ ಸಭೆ ಮಹತ್ವ ಪಡೆದುಕೊಂಡಿದೆ.