ಕೋಲ್ಕತ್ತ : ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ದೂರವಿಡಲು ಸಿ.ಪಿ.ಐ(ಎಂ) ನೊಂದಿಗೆ ಮಾತುಕತೆ ನಡೆಸುವುದಕ್ಕೂ ಸಿದ್ಧವಿರುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ, ಮಾವೋವಾದಿಗಳೊಂದಿಗೆ ಕೈಜೋಡಿಸಿದ್ದು ಬಂಗಾಳದ ಜಂಗಲ್ ಮಹಲ್ ಪ್ರದೇಶದಲ್ಲಿ ಭಯೋತ್ಪಾದಕರ ಆಳ್ವಿಕೆಯನ್ನು ತರಲು ಪ್ರಯತ್ನಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಖಾಸಗಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಮಮತಾ ಬ್ಯಾನರ್ಜಿ, ಇತ್ತೀಚೆಗಷ್ಟೇ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಬಿಜೆಪಿ ಬೆಂಬಲಿಗರನ್ನು ರೋಡ್ ರ್ಯಾಲಿವೊಂದರಲ್ಲಿ ಬಂಧಿಸಲಾಗಿತ್ತು. ಬಿಜೆಪಿ ಬೆಂಬಲಿಗರು ಮಾವೋವಾದಿಗಳೊಂದಿಗೆ ಸಂಪರ್ಕದಲ್ಲಿದ್ದು, ಪಶ್ಚಿಮ ಬಂಗಾಳದ ಜಂಗಲ್ ಮಹಲ್ ಪ್ರದೇಶದಲ್ಲಿ ಗಲಭೆ ಉಂಟು ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ಕೂಡ ಲಭ್ಯವಾಗಿದ್ದು, ಬಿಜೆಪಿ ಕಾರ್ಯಕರ್ತರು ಕಣಿವೆ ಪ್ರದೇಶದಲ್ಲಿ ಸಮಸ್ಯೆ ಉಂಟು ಮಾಡಲು ಯತ್ನಿಸುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಮಮತಾ ಬ್ಯಾನರ್ಜಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿಗೆ ಗುಪ್ತಚರ ಇಲಾಖೆ ವರದಿ ಬಂದಿದ್ದರೆ ಅದನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ಗೆ ಬಿಜೆಪಿ ಬಗ್ಗೆ ಭಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಾವೋವಾದಿಗಳೊಂದಿಗೆ ಸಂಪರ್ಕದಲ್ಲಿದ್ದಾರೆಂಬ ನಿರಾಧಾರ ಆರೋಪ ಮಾಡುತ್ತಿದ್ದಾರೆ ಎಂದು ಬಂಗಾಳ ಬಿಜೆಪಿ ಘಟಕ ಪ್ರತಿಕ್ರಿಯಿಸಿದೆ.
ಬಿಜೆಪಿಯನ್ನು ದೂರವಿಡಲು ಅತ್ತ ನಿತೀಶ್ ಕುಮಾರ್ ಬಿಹಾರದಲ್ಲಿ ಬದ್ಧ ವೈರಿ ಲಾಲೂ ಜೊತೆ ಕೈ ಜೋಡಿಸಿದ್ದರೆ. ಇತ್ತ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ದೂರವಿಡಲು ಮಮತಾ ಬ್ಯಾನರ್ಜಿ ತಮ್ಮ ಬದ್ಧ ವೈರಿ ಸಿ.ಪಿ.ಐ(ಎಂ)ನೊಂದಿಗೆ ಕೈಜೋಡಿಸುವುದಕ್ಕೂ ಸಿದ್ಧತೆ ನಡೆಸಿದ್ದಾರೆ ಎಂಬ ವದಂತಿ ಹಬ್ಬಿದೆ. ಪ್ರಜಾಪ್ರಭುತ್ವದಲ್ಲಿ ಯಾರೂ ಅಸ್ಪೃಶ್ಯರಲ್ಲ ಎಂದು ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ.