ಬೆಂಗಳೂರು : 'ವಂಚನೆ ಆರೋಪ' ಎದುರಿಸುತ್ತಿರುವ, ಕೇಂದ್ರ ರೈಲ್ವೆ ಸಚಿವ ಡಿ.ವಿ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಆ.30ರದು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಕಾರ್ತಿಕ್ ಗೌಡ ತನ್ನನ್ನು ಮದುವೆ ಮಾಡಿಕೊಳ್ಳುವುದಾಗಿ ಹೇಳಿ ವಂಚಿಸಿದ್ದಾರೆ ಎಂದು ಆರೋಪಿಸಿ ನಟಿ ಮೈತ್ರಿಯಾ ಗೌಡ ಅವರು ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ಕಾರ್ತಿಕ್ ಗೌಡ ಬಂಧನವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ನಟಿ ಮೈತ್ರಿಯಾ ಗೌಡ ಅವರ ಆರೋಪದ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಆರ್.ಟಿ.ನಗರ ಪೊಲೀಸರು ಈಗಾಗಲೇ ತನಿಖೆಯನ್ನು ಚುರುಕುಗೊಳಿಸಿದ್ದು, ಪ್ರಕರಣ ಸಂಬಂಧ ಕಾರ್ತಿಕ್ ಗೌಡ ಅವರಿಗೆ ನೋಟಿಸ್ ಕೂಡ ನೀಡಿದ್ದಾರೆ. ಯಾವುದೇ ಕ್ಷಣದಲ್ಲೂ ಬೇಕಾದರು ಪೊಲೀಸರು ಅವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಬಹುದು ಎಂದು ಹೇಳಲಾಗಿದೆ. ಶನಿವಾರ ಜಾಮೀನು ಅರ್ಜಿ ಸಲ್ಲಿಸಿರುವುದರಿಂದ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆಯಾಗುವ ಸಾಧ್ಯತೆ ಇದೆ.
ಆ.27ರಂದು ಸದಾನಂದ ಗೌಡರ ಪುತ್ರ ಕಾರ್ತಿಕ್ ಗೌಡ ನಿಶ್ಚಿತಾರ್ಥ ನಡೆಯುತ್ತಿದ್ದ ಸಂದರ್ಭದಲ್ಲಿ, ತನಗೂ ಕಾರ್ತಿಕ್ ಗೌಡ ಅವರಿಗೂ ಈಗಾಗಲೇ ಮದುವೆಯಾಗಿದೆ. ನನ್ನನ್ನು ಮದುವೆಯಾಗಿ ಈಗ ಮತ್ತೊಂದು ವಿವಾಹಕ್ಕೆ ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ ಎಂದು ಮೈತ್ರಿಯಾ ಗೌಡ ಆರೋಪಿಸಿದ್ದರು.