ಅಮೇಥಿ : ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅಮೇಥಿ ಲೋಕಸಭಾ ಕ್ಷೇತ್ರದ ಜನತೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ತಾವು ಪ್ರತಿನಿಧಿಸುತ್ತಿದ್ದ ಅಮೇಥಿ ಲೋಕಸಭಾ ಕ್ಷೇತ್ರಕ್ಕೆ ರಾಹುಲ್ ಗಾಂಧಿ ಸೆ.4ರಂದು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕ್ಷೇತ್ರದ ಜನತೆ, ವಿದ್ಯುತ್ ಸಮಸ್ಯೆ ಬಗೆಹರಿಸದೇ ಇರುವುದಕ್ಕೆ ಛೀಮಾರಿ ಹಾಕಿದ್ದಾರೆ. ಸಂಸದರಾಗಿ ಆಯ್ಕೆಯಾಗುವ ಸಂದರ್ಭದಲ್ಲಿ ಅಮೇಥಿ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದರು. ಆದರೆ ಚುನಾವಣೆ ನಂತರ ಕ್ಷೇತ್ರದ ಅಭಿವೃದ್ಧಿಯತ್ತ ರಾಹುಲ್ ಗಾಂಧಿ ಗಮನ ಹರಿಸುತ್ತಿಲ್ಲ ಎಂದು ಮತದಾರರು ಆರೋಪಿಸಿದ್ದಾರೆ.
ಅಮೇಥಿ ಸಾರ್ವಜನಿಕರ ಆರೋಪಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು ಕ್ಷೇತ್ರದ ಜನತೆ ಎದುರಿಸುತ್ತಿರುವ ವಿದ್ಯುತ್ ಸಮಸ್ಯೆ ಪರಿಹರಿಸಲು ಉತ್ತರ ಪ್ರದೇಶ ಮುಖ್ಯಮಂತ್ರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಕ್ಷೇತ್ರದ ಮತದಾರರೇ ಪ್ರತಿಭಟನೆ ನಡೆಸಿರುವುದಕ್ಕೆ ಉತ್ತರ ಪ್ರದೇಶ ಬಿಜೆಪಿ ವಕ್ತಾರ ವಿಜಯ್ ಬಹದ್ದೂರ್ ಪ್ರತಿಕ್ರಿಯಿಸಿದ್ದು, ರಾಜ್ಯದ ಜನತೆ ವಿದ್ಯುತ್ ಕೊರತೆ ಎದುರಿಸುತ್ತಿದ್ದಾರೆ. ಆದರೆ ತಮ್ಮ ಕ್ಷೇತ್ರಗಳಿಗೆ ಅಪರೂಪಕ್ಕೆ ಭೇಟಿ ನೀಡುವ ಜನಪ್ರತಿನಿಧಿಗಳಿಗೆ ಇದರ ಬಗ್ಗೆ ಅರಿವಿಲ್ಲ. ಪ್ರಮುಖವಾಗಿ ಕಾಂಗ್ರೆಸ್ ಜನಪ್ರತಿನಿಧಿಗಳು ಉತ್ತರ ಪ್ರದೇಶದಲ್ಲಿನ ವಿದ್ಯುತ್ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಿದ್ದಾರೆ.
ಒಟ್ಟಾರೆ ಅಮೇಥಿಯಲ್ಲಿ ನಡೆದಿರುವ ಘಟನೆಯಿಂದ ರಾಹುಲ್ ಗಾಂಧಿ ತಲೆತಗ್ಗಿಸುವಂತಾಗಿದೆ.