ಮೈಸೂರು : ಅತಿವೃಷ್ಟಿಯಿಂದ ಹಾನಿಗೊಳಗಾದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ಹಾನಿಗೀಡಾದ ರಾಯಚೂರು, ಗದಗ, ಗುಲ್ಬರ್ಗಾ, ಕೊಪ್ಪಳ ಮೊದಲಾದ ಜಿಲ್ಲೆಗಳಲ್ಲಿ ಸೆ.6ರಂದು ವೈಮಾನಿಕ ಸಮೀಕ್ಷೆ ನಡೆಸುತ್ತೇನೆ ಎಂದರು.
ಅತಿವೃಷ್ಟಿಯಿಂದಾಗಿ 350ರಿಂದ 400 ಕೋಟಿಯವರೆಗೆ ಬೆಳೆ ಹಾನಿಯಾಗಿದೆ. ತುರ್ತು ಪರಿಹಾರಕ್ಕಾಗಿ 80 ಕೋಟಿರೂ ಬಿಡುಗಡೆಮಾಡಲಾಗಿದೆ ಎಂದು ತಿಳಿಸಿದರು.
ಅತಿವೃಷ್ಟಿ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂಬ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ, ಸುಳ್ಳುಹೇಳುವುದನ್ನೇ ಬಿಜೆಪಿ ತನ್ನ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.
ಅತಿವೃಷ್ಟಿಯಾಗಿರುವ ಪ್ರದೇಶಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮೊಕ್ಕಾ ಹೂಡಿದ್ದಾರೆ. ಜಿಲ್ಲಾ ಕೇಂದ್ರಗಳನ್ನು ಬಿಟ್ಟು ಕದಲದಂತೆ ಸಚಿವರುಗಳಿಗೆ ಸೂಚಿಸಿದ್ದೇನೆ. ರಾಜ್ಯದ 8 ಕಡೆಗಳಲ್ಲಿ ವಾಡಿಕೆಗಳಿಗಿಂತ ಹೆಚ್ಚು ಮಳೆಯಾಗಿದೆ ಎಂದರು.