ನವದೆಹಲಿ : ದೆಹಲಿಯಲ್ಲಿ ಸರ್ಕಾರ ರಚಿಸಲು ಬಿಜೆಪಿ ನಾಯಕರು ಕಸರತ್ತು ನಡೆಸುತ್ತಿರುವ ಹಿನ್ನಲೆಯಲ್ಲಿ ಅದನ್ನು ತಡೆಯಲು ಮುಂದಾಗಿರುವ ಆಮ್ ಆದ್ಮಿ ಪಕ್ಷದ ನಾಯರು, ಲೆಫ್ಟಿನೆಂಟ್ ಗವರ್ನರ್ ಭೇಟಿಯಾಗಿದ್ದಾರೆ.
ಎ.ಎ.ಪಿ ನಾಯಕ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರನ್ನು ಭೇಟಿಯಾಗಿ, ದೆಹಲಿ ವಿಧಾನಸಭೆ ವಿಸರ್ಜಿಸಿ, ಮರು ಚುನಾವಣೆ ನಡೆಸುವಂತೆ ಮನವಿ ಮಾಡಿದ್ದಾರೆ.
ಸರ್ಕಾರ ರಚಿಸಲು ಬಿಜೆಪಿ ಬಳಿ ಬಹುಮತವಿಲ್ಲ, ಹೀಗಾಗಿ ಕುದುರೆ ವ್ಯಪಾಅರ ಮಾಡುತ್ತಿದೆ ಎಂದು ಆರೋಪಿಸಿರುವ ಎ.ಎ.ಪಿ ನಾಯಕರು, ಬಿಜೆಪಿ, ಎ.ಎ.ಪಿ ಶಾಸಕರನ್ನು ಸೆಳೆಯಲು ಹಣದ ಆಮಿಷವೊಡ್ಡಿದೆ ಎಂದು ಆರೋಪಿಸಿದರು.
ಅಲ್ಲದೇ ಆಮ್ ಆದ್ಮಿ ಪಕ್ಷದ ಶಾಸಕ ದಿನೇಶ್ ಮೊಹಾನಿಯಾ ಅವರಿಗೆ ದೆಹಲಿ ಬಿಜೆಪಿ ಉಪಾಧ್ಯಕ್ಷ ಶೇರ್ ಸಿಂಗ್ ಡಾಗರ್ ಅವರು 4 ಕೋಟಿ ರೂ. ಆಮಿಷವೊಡ್ಡಿರುವ ಬಗ್ಗೆ ಆಮ್ ಆದ್ಮಿ ಪಕ್ಷ ನಡೆಸಿದ ಸ್ಟಿಂಗ್ ಆಪರೇಷನ್ ವಿಡಿಯೋವನ್ನು ಲೆಫ್ಟಿನೆಂಟ್ ಗವರ್ನರ್ ಗೆ ನೀಡಿದ್ದಾರೆ.
ಸರ್ಕಾರ ರಚನೆಗೆ ಬಿಜೆಪಿಗೆ ಅವಕಾಶ ನೀಡಬೇಕು ಎಂದು ರಾಷ್ಟ್ರಪತಿಗೆ ಬರೆದಿರುವ ಪತ್ರವನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.