ಚಿಕ್ಕಮಗಳೂರು : ಸರ್ಕಾರದ ವತಿಯಿಂದ ಹಿಂದೂ ಪರ ಸಂಘಟನೆಗಳನ್ನು ನಿಷೇಧ ಮಾಡುವುದು ಸರಿಯಲ್ಲ, ತಾಕಿತ್ತಿದ್ದರೆ ಮುಸ್ಲೀಂ ಸಂಘಟನೆಗಳನ್ನು ನಿಷೇಧಿಸಲಿ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಹಿಂದೂ ಪರ ಸಂಘಟನೆಗಳನ್ನು ಕಾನೂನಿನ ಮೂಲಕ ಮಟ್ಟಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. ಈ ಧೋರಣೆ ಸರಿಯಲ್ಲ ಎಂದು ಕಿಡಿಕಾರಿದರು.
ಒಂದು ವೇಳೆ ಭಾರತ-ಪಾಕಿಸ್ತಾನ ನಡುವೆ ಯುದ್ಧವಾದರೆ ಪಾಕಿಸ್ತಾನಕ್ಕೆ ಬೆಂಬಲ ನೀಡುವುದಾಗಿ ಹೇಳಿಕೆ ನೀಡುವಂತಹ ನಾಯಕರು ಕಾಂಗ್ರೆಸ್ ನಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿರುವ ಅವರು, ಹಿಂದೂಪರ ಸಂಘಟನೆಗಳನ್ನು ನಿಷೇಧಿಸುವುದಾಗಿ ಮುಖ್ಯಮಂತ್ರಿಗಳು ನೀಡುರುವ ಹೇಳಿಕೆ ಹಿಂದೂ ಪರ ಸಂಘಟನೆ ಮಟ್ಟಹಾಕಲು ನಡೆಸುತ್ತಿರುವ ಯತ್ನವಾಗಿದೆ ಎಂದರು.
ಒಂದು ವೇಳೆ ಹಿಂದೂ ಸಂಘಟನೆ ನಿಷೇಧಿಸಲು ಯತ್ನಿಸಿದರೆ ಮುಂದಿನ ದಿನಗಳಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಶೋಭಾ ಕರಂದ್ಲಾಜೆ ಎಚ್ಚರಿಸಿದ್ದಾರೆ.
ಗೋವಾ ರಾಜ್ಯದಲ್ಲಿ ನಿಷೇಧಿಸಿರುವಂತೆ ಕರ್ನಾಟಕದಲ್ಲಿಯೂ ಶ್ರೀರಾಮಸೇನೆಯನ್ನು ನಿಷೇಧಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗುವುದು. ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ಬೆಳಗಾವಿ ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಕಾನೂನು ಕೈಗೆತ್ತಿಕೊಳ್ಳುತ್ತಿರುವ ಸಂಘಟನೆ ಹಾಗೂ ವ್ಯಕ್ತಿಯ ಮೇಲೆ ಸರ್ಕಾರ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿಗಳಿಗೆ ತಾಕತ್ತಿದ್ದರೆ ಮುಸ್ಲೀಂ ಸಂಘಟನೆಗಳನ್ನು ಬ್ಯಾನ್ ಮಾಡಲಿ ಎಂದು ಬಹಿರಂಗ ಸವಾಲು ಹಾಕಿದ್ದಾರೆ.