ಬೆಳಗಾವಿ : ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಿಸಬೇಕು ಎಂದು ಶಾಸಕ ಉಮೇಶ್ ಕತ್ತಿ ಮತ್ತೊಮ್ಮೆ ರಾಜ್ಯ ವಿಭಜನೆಯ ಹೇಳಿಕೆ ನೀಡಿದ್ದಾರೆ.
ಈ ಹಿಂದೆ ಪ್ರತ್ಯೇಕ ರಾಜ್ಯದ ಮಾತುಗಳನ್ನಾಡಿ ತೀವ್ರ ವಿವಾದಕ್ಕೆ ಕಾರಣರಾಗಿದ್ದ ಉಮೇಶ್ ಕತ್ತಿ ಮತ್ತದೇ ಹಳೆರಾಗ ಹಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು ಎಂದು ಆಗ್ರಹಿಸಿದರು.
ಎಲ್ಲಾ ಸರ್ಕಾರಗಳೂ ಉತ್ತರ ಕರ್ನಾಟಕ ಭಾಗವನ್ನು ನಿರ್ಲಕ್ಷಿಸುತ್ತಿದೆ. ಅತಿವೃಷ್ಟಿಯಿಂದಾಗಿ ಈ ಭಾಗದ ಜನತೆ ತತ್ತರಿಸಿ ಹೋಗಿದ್ದಾರೆ. ರಾಜ್ಯ ಸರ್ಕಾರ ಸಮರ್ಪಕವಾದ ಪರಿಹಾರ ನೀಡದೇ ನಿರ್ಲಕ್ಷಿಸಿದೆ. ಈ ಭಾಗದ ಜನರ ನೋವಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಗುಡುಗಿದ್ದಾರೆ.
ಈ ಭಾಗದ ಜನತೆಯ ಹಿತಕ್ಕಾಗಿ ಹಾಗೂ ಅಭಿವೃದ್ಧಿಗಾಗಿ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡುವ ಅಗತ್ಯವಿದೆ. ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು.
ಒಂದುವೇಳೆ ಪ್ರತ್ಯೇಕ ರಾಜ್ಯವನ್ನು ಘೋಷಿಸದಿದ್ದಲ್ಲಿ ಈ ಬಗ್ಗೆ ನಾವು ಪ್ರತ್ಯೇಕ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದ್ದಾರೆ.