ಬೆಳಾಗಾವಿ : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಸೆ.17ರಂದು ಬೆಳಗಾವಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ದಿಗ್ವಿಜಯ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ನೀಡಿರುವ ಒಳ್ಳೆಯ ದಿನಗಳ ಭರವಸೆ ಈಡೇರಿಲ್ಲ ಎಂದು ಆರೋಪಿಸಿದ್ದಾರೆ.
ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಒಳ್ಳೆಯ ದಿನಗಳ ಭರವಸೆ ನೀಡಿದ್ದರು. ಆದರೆ ಒಳ್ಳೆ ದಿನಗಳು ಪ್ರಧಾನಿ ಮೋದಿ ಅವರಿಗೆ ಮಾತ್ರ ಬಂದಿದೆ. ದೇಶದ ಜನರಿಗೆ ಬಂದಿಲ್ಲ ಎಂದು ಕಿಡಿ ಕಾರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ನೂತನ ಯೋಜನೆಗಳನ್ನು ಜಾರಿಗೊಳಿಸುತ್ತಿಲ್ಲ. ಯುಪಿಎ ಸರ್ಕಾರದ ಯೋಜನೆಗಳನ್ನೇ ಉದ್ಘಾಟಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಚುನಾವಣೆಯಲ್ಲಿ ಬಿಜೆಪಿಗೆ ಸೋಲು ಉಂಟಾಗಿದೆ. ಬಿಜೆಪಿ ಈ ಹಿಂದೆ ಗೆದ್ದಿದ್ದ ಕ್ಷೇತ್ರಗಳಲ್ಲೇ ಸೋಲು ಕಂಡಿದೆ ಎಂದು ಕಾಂಗ್ರೆಸ್ ನಾಯಕ ಲೇವಡಿ ಮಾಡಿದ್ದಾರೆ.
ಇದೇ ವೇಳೆ ರಾಜ್ಯ ಸಚುವ ಸಂಪುಟ ವಿಸ್ತರಣೆ ಬಗ್ಗೆಯೂ ಮಾತನಾಡಿರುವ ದಿಗ್ವಿಜಯ್ ಸಿಂಗ್, ಈ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಅಸಮರ್ಥ ಸಚಿವರನ್ನು ಕೈಬಿಡಬೇಕೆಂಬ ಚಿಂತನೆ ನಡೆದಿದೆ. ಡಿಸಿಎಂ ಹುದ್ದೆ ಅಗತ್ಯವಿದ್ದರೆ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಲಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.