ಬೆಂಗಳೂರು : ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ರಾಜ್ಯ ಕಾಂಗ್ರೆಸ್ ಕಾರ್ಯಕಾರಿ ಸಭೆ ಆರಂಭವಾಗಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಭೆ ಆರಂಭವಾಗಿದ್ದು, ಹಲವು ಸಚಿವರು, ಕಾಂಗ್ರೆಸ್ ನ ಪದಾಧಿಕಾರಿಗಳು, ಕೆಪಿಸಿಸಿ ಕಾರ್ಯಕಾರಿ ಸಮಿತಿ ಸದಸ್ಯರು, ಮುಂಚೂಣಿ ಘಟಕದ ಅಧ್ಯಕ್ಷರು ಭಾಗವಹಿಸಿದ್ದಾರೆ.
ಕಾರ್ಯಕಾರಿ ಸಭೆಗೂ ಮೊದಲು ಮಾತನಾಡಿದ ಜಿ.ಪರಮೇಶ್ವರ್, ನಿಗಮ ಮಂಡಳಿ ನೇಮಕಾತಿ ವಿಚಾರವಾಗಿ ಸಭೆಯಲ್ಲಿ ಅಭಿಪ್ರಾಯ ಸಂಗ್ರಹಿಸಲಾಗುವುದು. ಶೇ.60ರಷ್ಟು ಹುದ್ದೆಗಳು ಅಹಿಂದಾ ವರ್ಗಕ್ಕೆ ಹಾಗೂ ಶೇ.40ರಷ್ಟು ಹುದ್ದೆಗಳು ಸಾಮಾನ್ಯ ವರ್ಗಕ್ಕೆ ಮೀಸಲಿಡಲು ನಿರ್ಧರಿಸಲಾಗುವುದು ಎಂದರು.
ಮುಂಬರುವ ಬಿಬಿಎಂಪಿ ಚುನಾವಣೆ, ಗ್ರಾಮ ಪಂಚಾಯತ್ ಚುನಾವಣೆಗಳ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ರಾಜ್ಯ ಕಾರ್ಯಕಾರಿ ಸಭೆಯ ಮುಖ್ಯ ಅಜೆಂಡಾಗಳೆಂದರೆ ರಾಜ್ಯದ ಅತಿವೃಷ್ಟಿ, ಅನಾವೃಷ್ಟಿ ಪರಿಸ್ಥಿತಿ, ಪಕ್ಷದ ಸದಸ್ಯತ್ವ ನೋಂದಣಿ, ಸಾಂಸ್ಥಿಕ ಚುನಾವಣೆ, ಮುಂದಿನ 6ತಿಂಗಳು ಪಕ್ಷ ಕೈಗೊಳ್ಳಬೇಕಾದ ಕಾರ್ಯಕ್ರಮಗಳು ಮೊದಲಾದ ವಿಚಾರಗಳ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ.