ಬೆಂಗಳೂರು : ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೇ ಹೇಳಿಸಿಕೊಳ್ಳುವ ಕೆಲಸ ಮಾಡಬೇಡಿ ಎಂದು ತಾಕೀತು ಮಾಡಿದ್ದಾರೆ.
ಬೆಂಗಳೂನಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಮಾತನಾಡಿದ ಅವರು, ಆಯಾ ಜಿಲ್ಲಾ ಉಸ್ತುವಾರಿ ಸಚಿವರುಗಳು ಸಮಸ್ಯೆಯಿರುವ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ನಿಮಗೇನು ತೊಂದರೆ? ಪದೇ ಪದೆ ವಿಪಕ್ಷದವರ ಹಾಗೂ ಮಾಧ್ಯಮದವರ ಟೀಕೆಗಳಿಗೆ ಒಳಗಾಗುತೀದ್ದೀರಾ. ಹೀಗಾದರೆ ಮತದಾರರಿಗೆ ಏನೆಂದು ಉತ್ತರಿಸುತ್ತೀರಾ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅರ್ಕಾವತಿ ಡಿನೋಟಿಫಿಕೇಶನ್ ಹಗರಣದ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಎಲ್ಲಾ ಡಿನೋಟಿಫಿಕೇಷನ್ ಹಗರಣಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ತನಿಖೆಗೆ ಒಳಪಡಿಸಲಾಗುವುದು ಎಂದರು.
ಬಿಜೆಪಿ ಅವಧಿಯಲ್ಲಿ ಹತ್ತುಸಾವಿರಕ್ಕೂ ಹೆಚ್ಚು ಎಕರೆ ಭೂಮಿ ಡಿನೋಟಿಒಫೈ ಆಗಿದ್ದು, ಈಗ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ಯಾವುದೇ ಡಿನೋಟಿಫಿಕೇಷನ್ ಹಗರಣ ನಡೆದಿಲ್ಲ ಎಂದು ತಿಳಿಸಿದರು.
ಬಿಬಿಎಂಪಿ ವಿಭಜನೆಗೆ ಸರ್ಕಾರ ಬದ್ಧವಾಗಿದೆ. ಪಾಲಿಕೆಯನ್ನು ಮೂರು ವಿಭಾಗಗಳನ್ನಾಗಿ ಮಾಡುವ ಸಂಬಂಧ ಸಮಿತಿ ರಚಿಸಲಾಗಿದೆ. ಸಮಿತಿ ವರದಿ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಬೆಂಗಳೂರು 80ಕಿ.ಮೀ ಗೂ ಅಧಿಕ ವ್ಯಾಪ್ತಿಯಲ್ಲಿ ಬೆಳೆದಿದ್ದು, ರಸ್ತೆ, ಸಂಚಾರ, ಆಡಳಿತ, ಮೂಲಭೂತ ಸೌಕರ್ಯ ಎಲ್ಲವನ್ನೂ ಸುಸೂತ್ರವಾಗಿ ಪೂರೈಸಲು ವಿಭಜನೆಯಿಂದ ಸಾಧ್ಯ ಎಂದು ತಿಳಿಸಿದರು.
ಕಾರ್ಯಕಾರಿ ಸಭೆ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಸಭೆಯಲ್ಲಿ ನಿಗಮ ಮಂಡಳಿಗಳ ನೇಮಕಾತಿ, ಅತಿವೃಷ್ಟಿ, ಜಮ್ಮು-ಕಾಶ್ಮೀರ ನೆರೆ ಸಂತ್ರಸ್ತರಿಗೆ ಪರಿಹಾರ ಮೊದಲಾದ ವಿಚಾರಗಳ ಬಗ್ಗೆ ಚರ್ಚಿಸಲಾಯಿತು ಎಂದರು.
ನಿಗಮ ಮಂಡಳಿಗಳಿಗೆ ಸೆ.30 ಅಥವಾ ಅಕ್ಟೋಬರ್ ನಲ್ಲಿ ನೇಮಕಾತಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ಬಿಬಿಎಂಪಿ ವಿಭಜನೆ ವಿಚಾರ ಕೂಡ ಚರ್ಚೆಗೆ ಬಂದಿದ್ದು, ಬಿ.ಎಲ್.ಶಂಕರ್ ನೇತೃತ್ವದಲ್ಲಿ ರಚಿಸಲಾದ ಸಮಿತಿ ವರದಿ ಬಂದ ಬಳಿಕ ವಿಭಜನೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ವಾರದ ಹೆಚ್ಚಿನ ದಿನಗಳನ್ನು ಸಚಿವರು ಜಿಲ್ಲೆಯಲ್ಲಿ ಕಳೆಯಬೇಕು, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಚಿವರು ಹೆಚ್ಚು ಜಾಗೃತರಾಗಿರಬೇಕು, ವಿವಾದಾತ್ಮಕ ಹೇಳಿಕೆಗಳಿಂದ ದೂರವಿರಬೇಕು, ಜಿಲ್ಲೆಯಲ್ಲಿ ವಾಸ್ತವ್ಯ ಹೂಡುವ ಮೂಲಕ ಕಾರ್ಯಕರ್ತರಲ್ಲಿ ಶಕ್ತಿ ತುಂಬಬೇಕು, ಜಿಲ್ಲೆಗಳಿಗೆ ಭೇಟಿ ನೀಡುವಾಗ ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಜತೆಯಲ್ಲಿ ಕರೆದುಕೊಂಡುಹೋಗಬೇಕು ಎಂದು ಕೆಪಿಸಿಸಿ ಸಚಿವರುಗಳುಗೆ ಖಡಕ್ ಆಗಿ ತಾಕೀತು ಮಾಡಿದೆ.