ಮುಂಬೈ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಶಿವಸೇನೆ ನಡುವಿನ ಸೀಟು ಹಂಚಿಕೆ ಕಗ್ಗಂಟಾಗಿಯೇ ಉಳಿದಿದೆ. ಸೀಟು ಹಂಚಿಕೆ ವಿಚಾರದಲ್ಲಿ ಪಟ್ಟು ಸಡಿಲಿಸಿ, ಮೈತ್ರಿ ಉಳಿಸಿಕೊಳ್ಳುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮನವಿ ಮಾಡಿದ್ದಾರೆ ಎಂಬ ಸುದ್ಧಿಯನ್ನು ಉದ್ಧವ್ ಠಾಕ್ರೆ ನಿರಾಕರಿಸಿದ್ದಾರೆ.
ಸೀಟು ಹಂಚಿಕೆ ಗೊಂದಲಕ್ಕೆ ಸಂಬಂಧಿಸಿದಂತೆ ಅಮಿತ್ ಶಾ ಶೀವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆಯವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಶಿವಸೇನೆ ಕಳೆದ ೨೫ ವರ್ಷಗಳಲ್ಲಿ ಎಂದೂ ಗೆಲ್ಲಲದ 59 ಸ್ಥಾನಗಳ ಬಗ್ಗೆ ಪುನರ್ ವಿಮರ್ಶೆ ನಡೆಸುವಂತೆ ತಿಳಿಸಿದ್ದಾರೆ ಎನ್ನಲಾಗಿತ್ತು. ಬಿಜೆಪಿ ಜತೆ ಮೈತ್ರಿ ಉಳಿಸಿಕೊಳ್ಳಲು ಶಾ ಮನವಿ ಮಾಡಿದ್ದಾರೆ ಎಂದು ಹೇಳಲಾಗಿತ್ತು.
ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಉದ್ಧವ್ ಠಾಕ್ರೆ, ಸೀಟು ಹೊಂದಾಣಿಕೆ ಬಗ್ಗೆ ತಮಗೆ ಅಮಿತ್ ಶಾರಿಂದ ಯಾವುದೇ ಫೋನ್ ಕರೆ ಬಂದಿಲ್ಲ ಎಂದು ತಿಳಿಸಿದ್ದಾರೆ.
ಈ ನಡುವೆ ದೆಹಲಿಯಲ್ಲಿ ಮಾತನಾಡಿರುವ ಬಿಜೆಪಿ ವಕ್ತಾರ ರಾಜೀವ್ ಪ್ರತಾಪ್ ರೂಡಿ, ಶೀವಸೇನೆ ಜತೆ ಮೈತ್ರಿ ಉಳಿಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ. ಕಾಂಗ್ರೆಸ್ ಹಾಗೂ ಎನ್ ಸಿಪಿ ಸೋಲಿಸುವುದೇ ನಮ್ಮ ಗುರಿ. ಒಂದು ವೇಳೆ ಮೈತ್ರಿ ಮುರಿದರೆ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.
ಇದೇವೇಳೆ ಕಾಂಗ್ರೆಸ್-ಎನ್ ಸಿಪಿ ನಡುವೆಯೂ ಬಿಕ್ಕಟ್ಟು ಮುಂದುವರೆದಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನವದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ. ಅಲ್ಲದೇ ಸೀಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಎನ್ ಸಿಪಿ ಕೂಡ ಕೋರ್ ಕಮಿಟಿ ಸಭೆ ನಡೆಸಲಿದೆ.