ಬೆಂಗಳೂರು : ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಾಸಕ್ಕಾಗಿ ಕಡಿಮೆ ವಿಸ್ತೀರ್ಣದಲ್ಲಿ ಮನೆ ಕಟ್ಟಿಕೊಂಡಿರುವವರನ್ನು ಒಕ್ಕಲೆಬ್ಬಿಸದೇ ಸಕ್ರಮ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಡಿಮೆ ವಿಸ್ತೀರ್ಣದ ಅಕ್ರಮ ಮನೆಗಳ ಸಕ್ರಮಕ್ಕೆ ನಿರ್ಧರಿಸಿರುವುದಾಗಿ ತಿಳಿಸಿದರು. ನಗರ ಪ್ರದೇಶಗಳಲ್ಲಿ ವಾಸಕ್ಕಾಗಿ ನಿರ್ಮಿಸಲಾಗಿರುವ 30x40 ವಿಸ್ತೀರಣದಲ್ಲಿ ನಿರ್ಮಿಸಲಾಗಿರುವ ಅಕ್ರಮ ಮನೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 40x60 ವಿಸ್ತೀರ್ಣಗಳಲ್ಲಿ ನಿರ್ಮಿಸಿಕೊಂಡಿರುವ ಅಕ್ರಮ ಮನೆಗಳನ್ನು ಸಕ್ರಮಗೊಳಿಸಲು ಭೂ ಸುಧಾರಣಾ ಕಾಯ್ದೆ 94(ಸಿ)ಗೆ ತಿದ್ದುಪಡಿ ತರಲಾಗಿದೆ ಎಂದು ವಿವರಿಸಿದರು.
ಸರ್ಕಾರಿ ಭೂಮಿ ಕಬಳಿಕೆ ತೆರವುಗೊಳಿಸಲು ರಾಜ್ಯ ಸರ್ಕಾರ ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ 2011ಅನ್ನು ರೂಪಿಸಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಿದ್ದು, ರಾಷ್ಟ್ರಪತಿಗಳಿಗೆ ಕಳುಹಿಸಲಾಗಿದೆ. ರಾಷ್ಟ್ರಪತಿ ಅಂಗೀಕಾರದ ಬಳಿಕ ಭೂ ಕಬಳಿಕೆ ತೆರವುಗೊಳಿಸಲು ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದೇ ವೇಳೆ 94(ಸಿ) ಕಾಯ್ದೆ ಅನ್ವಯ ಪಾರಂಪರಿಕ ಅರಣ್ಯವನ್ನು ಒತ್ತುವರಿ ಮಾಡಿಕೊಂಡಿರುವ ಸಣ್ಣ ಹಿಡುವಳಿದಾರರ ಹಿತರಕ್ಷಣೆಗೆ ಸರ್ಕಾರ ಬದ್ಧವಿದೆ ಎಂದು ತಿಳಿಸಿದರು.