ಬೆಂಗಳೂರು : ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಿದ್ದಾರೆ.
ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದ ಪ್ರಧಾನಿ ಮೋದಿಯವರನ್ನು ರಾಜ್ಯಪಾಲ ವಾಜುಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ.ಸದಾನಂದಗೌಡ, ಜಿ.ಎಂ.ಸಿದ್ದೇಶ್ವರ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು.
ವಿಮಾನ ನಿಲ್ದಾಣದಿಂದ ಹೊರಬಂದ ಪ್ರಧಾನಿ ಮೋದಿಯವರನ್ನು ಬಿಜೆಪಿ ವತಿಯಿಂದ ಸಾಂಪ್ರದಾಯಿಕವಾಗಿ ಗೌರವಿಸಲಾಗುತ್ತದೆ. ಇದಕ್ಕಾಗಿ ವೇದಿಕೆಯನ್ನು ನಿರ್ಮಿಸಲಾಗಿದೆ. ಬಳಿಕ ಮೋದಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸುಮಾರು 10-15 ಸಾವಿರ ಕಾರ್ಯಕರ್ತರು ಆಗಮಿಸುವ ನಿರೀಕ್ಷೆಯಿದೆ.
ಬಳಿಕ ಪ್ರಧಾನಿ ಮೋದಿ ರಾಜಭವನಕ್ಕೆ ತೆರಳಿ, ಅಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಸೆ.24ರಂದು ಮುಂಜಾನೆ 6ಗಂಟೆಗೆ ರಾಜಭವನದಿಂದ ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ಮಂಗಳಯಾನ ನೌಕೆ ಮಂಗಳ ಗ್ರಹದ ಕಕ್ಷೆಗೆ ಸೇರುವುದನ್ನು ವೀಕ್ಷಿಸಲಿದ್ದಾರೆ. ಈ ವೇಳೆ ಇಸ್ರೋ ವಿಜ್ನಾನಿಗಳ ಜತೆ ಮಾತುಕತೆ ನಡೆಸಲಿದ್ದಾರೆ.
ಬಳಿಕ ಅಲ್ಲಿಂದ ತುಮಕೂರಿಗೆ ತೆರಳಲಿರುವ ಮೋದಿ, ಅಲ್ಲಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಫುಡ್ ಪಾರ್ಕ್ ಗೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ಆಶೀರ್ವಾದ ಪಡೆಯಲಿದ್ದಾರೆ.