ಬಳ್ಳಾರಿ : ಬಳ್ಳಾರಿ ಜಿಲ್ಲಾ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ 850 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
ಬಳ್ಳಾರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಅಭಿದ್ಧಿಗಾಗಿ 850 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿರುವುದಾಗಿ ತಿಳಿಸಿದರು. ಸಭೆಯಲ್ಲಿ 9 ಸಚಿವರು ಭಾಗಿಯಾಗಿದ್ದರು.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದರೆ ಬಳ್ಳಾರಿ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವುದಾಗಿ ಚುನಾವಣೆಗೂ ಮುನ್ನ ಭರವಸೆ ನೀಡಿಲಾಗಿತ್ತು. ಈ ನಿಟ್ಟಿನಲ್ಲಿ ಪ್ಯಾಕೇಜ್ ಘೋಷಿಸಲಾಗಿದ್ದು, ನುಡಿದಂತೆ ನಡೆದಿದ್ದೇವೆ ಎಂದರು.
ಸಮಾಜಕಲ್ಯಾಣ ಇಲಾಖೆ ವತಿಯಿಂದ 204 ಕೋಟಿ ರೂ ಮೀಸಲಿಡಲಾಗಿದ್ದು, ನಗರಾಭಿವೃದ್ಧಿ ಇಲಾಖೆ ವತಿಯಿಂದ 12,399 ಮನೆಗಳನ್ನು ನಿರ್ಮಿಸಲಾಗುವುದು. 110 ಕೋಟಿ ವೆಚ್ಚದಲ್ಲಿ ಬಳ್ಳಾರಿ ನಗರಗಳಲ್ಲಿ ಮನೆ ನಿರ್ಮಾಣ ಹಾಗೂ 2 ಲಕ್ಷ ವೆಚ್ಚದಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಮನೆಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಶೌಚಾಲಯ ನಿರ್ಮಾಣಕ್ಕೆ 37 ಕೋಟಿ ರೂ, ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿಗಾಗಿ 50 ಕೋಟಿ ರೂ, ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ 13 ಕೋಟಿ ರೂ, ವಿದ್ಯುತ್ ಸಂಪರ್ಕ ಕಲ್ಪಿಸಲು 10 ಕೋಟಿ ಹಾಗೂ ಕುಡಿಯುವ ನೀರಿಗಾಗಿ 60 ಕೋಟಿ ರೂ ಮೀಸಲಿಡಲಾಗಿದೆ ಎಂದು ವಿವರಿಸಿದರು.
ಬಳ್ಳಾರಿಯ ಸಿರಿವಾರ-ಜಾಗನೂರಿನಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಏರ್ ಪೋರ್ಟ್ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿತ್ತು. ಏರ್ ಪೋರ್ಟ್ ನಿರ್ಮಾಣಕ್ಕೆ ನಾನು ವಿರೋಧ ವ್ಯಕ್ತಪಡಿಸಿದ್ದೆ. ಭೂ ಸ್ವಾಧೀನಕ್ಕಾಗಿ ಸರ್ವೆ ಕಾರ್ಯ ನಡೆಯುತ್ತಿದ್ದು, ಏರ್ ಪೋರ್ಟ್ ನಿರ್ಮಾಣ ಮಾಡಬೇಕೋ ಬೇಡವೋ ಎಂಬ ಬಗ್ಗೆ ನಿರ್ಧರಿಸಲಾಗುವುದು ಎಂದರು.