ಚಾಮರಾಜನಗರ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ತಮ್ಮ ಮುಂದಿನ ಗುರಿ ಎಂದು ಹೇಳಿಕೆ ನೀಡಿರುವ ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿಯವರಿಗೆ ಮತಿಭ್ರಮಣೆಯಾಗಿದೆ ಎಂದು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಲೇವಡಿ ಮಾಡಿದ್ದಾರೆ.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಮಾತನಾಡಲು ಅಧಿಕಾರವಿದೆ ಆದರೆ ತಮ್ಮ ವಯಕ್ತಿಕ ಪ್ರಚಾರಕ್ಕಾಗಿ ಸೋನಿಯಾ ಗಾಂಧಿಯವರಂತಹ ರಾಜಕಾರಣಿಗಳ ಮೇಲೆ ಆರೋಪ ಮಾಡುವುದು ಸರಿಲ್ಲ ಎಂದರು.
ಸುಬ್ರಹ್ಮಣ್ಯನ್ ಸ್ವಾಮಿ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರಿಗೆ ಮತಿಭ್ರಮಣೆಯಾಗಿದೆ. ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುವುದನ್ನು ಅವರು ಮೊದಲು ನಿಲ್ಲಿಸಲಿ ಎಂದು ತಿಳಿಸಿದರು.
ತಮಿಳುನಾನು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಜೈಲು ಶಿಕ್ಷೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಜಯಲಲಿತಾ ಜೈಲು ಪಾಲಾಗಿರುವುದು ದುರದೃಷ್ಟಕರ. ಕಾನೂನು ಚಕ್ರ ತಿರುಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ. ಹೀಗಾಗಿ ಜಯಲಲಿತಾ ಕಾನೂನು ಚಕ್ರದಡಿ ಸಿಲುಕಿದ್ದಾರೆ ಎಂದರು.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರಿಗೆ ಜೈಲು ಶಿಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ, ಹಿಂದೆ ಜಯಲಲಿತಾ ವಿರುದ್ಧ ತಮಿಳುನಾಡಿನಲ್ಲಿ ಭ್ರಷ್ಟಾಚಾರ ವಿರೋಧಿ ಹೋರಾಟ ನಡೆಸಿದ್ದೆ. ಇದು ಹೋರಾಟಕ್ಕೆ ಸಿಕ್ಕ ಜಯವಾಗಿದ್ದು, ತಮ್ಮ ಮುಂದಿನ ಗುರಿ ಭ್ರಷ್ಟರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಎಂದು ಸುಬ್ರಹ್ಮಣ್ಯನ್ ಸ್ವಾಮಿ ಪ್ರತಿಕ್ರಿಯಿಸಿದ್ದರು.