ಬೆಂಗಳೂರು : ನಿಗಮ ಮಂಡಳಿ ನೇಮಕಾತಿ ಪ್ರಕ್ರಿಯೆಗೆ ನಿರೀಕ್ಷೆಯಂತೆಯೇ ಈವಾರ ಚಾಲನೆ ದೊರೆಯಲಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ 10ದಿನಗಳಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಈಗಾಗಲೇ ಹಲವು ಕಾಂಗ್ರೆಸ್ ನಾಯಕರು ತಮ್ಮ ಬೆಂಬಲಿಗರಿಗೆ ಸ್ಥಾನ ನೀಡುವಂತೆ ಶಿಫಾರಸು ಮಾಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ, ಧರ್ಮಸಿಂಗ್, ಬಿ.ಕೆ.ಹರಿಪ್ರಸಾದ್, ಆಸ್ಕರ್ ಫರ್ನಾಂಡಿಸ್ ತಮ್ಮ ಬೆಂಬಲಿಗರಿಗೆ ಸ್ಥಾನ ನೀಡುವಂತೆ ಶಿಫಾರಸು ಮಾಡಿದ್ದರೆ, ಇನ್ನು ಕೆಲ ಆಕಾಂಕ್ಷಿಗಳು ಎಐಸಿಸಿ ಪ್ರಭಾವಿಗಳಾದ ಗುಲಾಂ ನಬಿ ಆಜಾದ್, ಮಧುಸೂದನ ಮಿಸ್ತ್ರಿ, ಅಹ್ಮದ್ ಪಟೇಲ್ ಅವರನ್ನು ಭೇಟಿಯಾಗುವ ಮೂಲಕ ಒತ್ತಡ ಹೇರುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅ.7ರ ಬಳಿಕ ಭೇಟಿಯಾಗಿ ನೇಮಕಾತಿ ಪಟ್ಟಿಯನ್ನು ಅಖೈರುಗೊಳಿಸಲಿದ್ದಾರೆ.
ಪೈಪೋಟಿ ತೀವ್ರಗೊಂಡಿರುವ ಹಿನ್ನಲೆಯಲ್ಲಿ ರಾಜ್ಯ ನಾಯಕತ್ವದ ಮೊದಲ ಹಂತದಲ್ಲಿ 40 ನಿಗಮ ಮಂಡಳಿಗಳಿಗೆ ನೇಮಕಾತಿ ಪಟ್ಟಿ ಪ್ರಕಟಿಸಿ, ಇದಕ್ಕೆ ದೊರೆಯುವ ಪ್ರತಿಕ್ರಿಯೆಯನ್ನು ಕಾದು ನೋಡಿ ಬಳಿಕ ಉಳಿದ ಸ್ಥಾನಗಳಿಗೆ ಭರ್ತಿ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಲಲಾಗುತ್ತಿದೆ.