ಚೆನ್ನೈ : ವ್ಯಕ್ತಿಪೂಜೆಯ ಪರಾಕಾಷ್ಠೆ ತಲುಪುತ್ತಿರುವ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಭಿಮಾನಿಗಳು ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರ ಮೇಲೆ ತಮ್ಮ ಹತಾಶೆಯನ್ನು ತೋರಲು ಮುಂದಾಗಿದ್ದಾರೆ. ತಮ್ಮ ಕುರುಡು ಅಭಿಮಾನದ ಪ್ರದರ್ಶನಕ್ಕೆ ನ್ಯಾಯಾಲಯದ ಆದೇಶಕ್ಕೂ ಬೆಲೆ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ.
ಸಧ್ಯಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸಿಯಾಗಿರುವ ಜಯಲಲಿತಾ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು, ಇಲ್ಲದೇ ಇದ್ದರೆ ತಮಿಳುನಾಡಿರುವ ಕನ್ನಡಿಗರಿಗೆ ತೊಂದರೆ ಉಂಟುಮಾಡುವುದಾಗಿ ಎಐಎಡಿಎಂಕೆ ಕಾರ್ಯಕರ್ತರು ಪೋಸ್ಟರ್ ಮೂಲಕ ಬೆದರಿಕೆ ಹಾಕಿದ್ದಾರೆ.
ಅ.7ರಂದು ಕರ್ನಾಟಕ ಹೈಕೋರ್ಟ್ ನಲ್ಲಿ ತಮಿಳುನಾಡು ಮಾಜಿ ಸಿ.ಎಂ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ಇದ್ದ ಹಿನ್ನೆಲೆಯಲ್ಲಿ ಎಐಎಡಿಎಂಕೆ ಸದಸ್ಯರು ತಮಿಳುನಾಡಿನಲ್ಲಿರುವ ಕನ್ನಡಿಗರಿಗೆ ಅಪಾಯ ಉಂಟುಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಕೂಡಲೇ ಜಯಲಲಿತಾ ಅವರನ್ನು ಬಿಡುಗಡೆ ಮಾಡದೇ ಇದ್ದಲ್ಲಿ ಕನ್ನಡಿಗರನ್ನು ಒತ್ತೆಯಾಳಾಗಿರಿಸಿಕೊಳ್ಳುತ್ತೇವೆ ಎಂದು ಪೋಸ್ಟರ್ ಗಳ ಮೂಲಕ ಎಚ್ಚರಿಕೆ ನೀಡಲಾಗಿದೆ.
ಕನ್ನಡಿಗರಿಗೆ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಎಂ.ಎನ್ ರೆಡ್ಡಿ ದಕ್ಷಿಣ ಚೆನ್ನೈ ನ ಆಯುಕ್ತ ಜಾರ್ಜ್ ಅವರೊಂದಿಗೆ ಮಾತುಕತೆ ನಡೆಸಿ, ತಕ್ಷಣವೇ ಪೋಸ್ಟರ್ ಗಳನ್ನು ತೆರವುಗೊಳಿಸಬೇಕು ಹಾಗೂ ಕನ್ನಡಿಗೆ ರಕ್ಷಣೆ ನೀಡಬೇಕೆಂದು ಮನವಿ ಮಾಡಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಸಕಾರಾತ್ಮಕವಾಗಿ ಸ್ಪಂಧಿಸಿರುವ ಜಾರ್ಜ್, ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೇ ಬೆದರಿಕೆ ಪೋಸ್ಟರ್ ತೆರವುಗೊಳಿಸುವುದಲ್ಲದೆ, ಎಐಎಡಿಎಂಕೆ ಕಾರ್ಯಕರ್ತರ ವಿರುದ್ಧವೂ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.