ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸರ್ಕಾರಿ ಭೂಮಿ ಕಬಳಿಸಿ ನಿರ್ಮಾಣಗೊಂಡಿರುವ ಅಪಾರ್ಟ್ ಮೆಂಟ್, ಕಟ್ಟದಗಳು, ಕರೆ ಒತ್ತುವರಿ ಮಾಡಿ ನಿರ್ಮಿಸಿರುವ ಲೇಔಟ್ ಗಳ ತೆರವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ.
ಸರ್ಕಾರಿ ಭೂ ಕಬಳಿಕೆ ಮಾಡಿರುವವರು ಎಷ್ಟೇ ಪ್ರಭಾವಿತರಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಂಡು, ಅಂತಹ ಕಟ್ಟಡಗಳನ್ನು ತೆರವುಗೊಳಿಸಲು ಉದ್ದೇಶಿಸಲಾಗಿದ್ದು, ತಕ್ಷಣದಿಂದಲೇ ಆದೇಶ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ.
ಭೂ ಒತ್ತುವರಿ ಹಾಗೂ ಭೂ ಕಬಳಿಕೆ ಪ್ರಕರಣಗಳನ್ನು ಸಮಗ್ರವಾಗಿ ಪರಿಶೀಲಿಸಿ, ತೆರವು ಕುರಿತಂತೆ ಪರಿಣಾಮಕಾರಿ ಕ್ರಮಗಳನ್ನು ಕ್ಷಿಪ್ರವಾಗಿ ಕೈಗೊಳ್ಳಲು ಬೆಂಗಳೂರು ನಗರ ಜಿಲ್ಲೆಗೆ ಮತ್ತಿಬ್ಬರು ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ರಾಜ್ಯದ ರಾಜಧಾನಿ ಬೆಂಗಳೂರೂ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಕೋಟ್ಯಾಂತರ ರೂ ಮೌಲ್ಯದ ಭೂ ಒತ್ತುವರಿಯಾಗಿದೆ ಎಂಬ ಎ.ಟಿ.ರಾಮಸ್ವಾಮಿ ವರದಿ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿದ ಈ ಸಭೆಯಲ್ಲಿ ಭೂಮಿ ವಶಪಡಿಸಿಕೊಳ್ಳಲು ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಪರಿಣಾಮಕಾರಿ ಕ್ರಮಗಳನ್ನು ಕ್ಷಿಪ್ರವಾಗಿ ಅನುಷ್ಠಾನಕ್ಕೆ ತರಬೇಕಾದರೆ ಇದಕ್ಕಾಗಿಯೇ ಪ್ರಸ್ತುತ ಇರುವ ಜಿಲ್ಲಾಧಿಕಾರಿಯವರ ಜೊತೆಗೆ ಸಮಾನ ದರ್ಜೆಯ ಮತ್ತಿಬ್ಬರು ಜಿಲ್ಲಾಧಿಕಾರಿಗಳನ್ನು ನೇಮಕ ಮಾಡುವುದು ಸೂಕ್ತ ಎಂಬ ತೀರ್ಮಾನಕ್ಕೆ ಬರಲಾಯಿತು. ಇನ್ನೆರಡು ದಿನಗಳಲ್ಲಿ ಬೆಂಗಳೂರು ನಗರ ಜಿಲ್ಲೆಗೆ ಪ್ರಸ್ತುತ ಇರುವ ಜಿಲ್ಲಾಧಿಕಾರಿಯವರ ಜೊತೆಗೆ ಇಬ್ಬರು ನೂತನ ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಲಾಗುವುದು.
ಬೆಂಗಳೂರು ನಗರ ಜಿಲ್ಲೆಯಲ್ಲಿಯೇ ಎಂಟು ಸಾವಿರ ಪ್ರಕರಣಗಳಲ್ಲಿ 34,000 ಎಕರೆ ಭೂ ಒತ್ತುವರಿಯಾಗಿದೆ. ಈ ಹಿಂದೆ ಇದ್ದ ವಿಶೇಷ ಜಿಲ್ಲಾಧಿಕಾರಿಗಳ ಅವಧಿಯಲ್ಲೇ ಬಹುತೇಕ ಅಕ್ರಮಗಳು ನಡೆದಿವೆ ಎಂಬ ರಾಮಸ್ವಾಮಿ ಅವರ ವರದಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ಓರ್ವ ವಿಶೇಷ ಜಿಲ್ಲಾಧಿಕಾರಿಯನ್ನು ಅಮಾನತ್ತು ಮಾಡಿದೆ.ಭೂ ಕಬಳಿಕಾ ತಡೆ ಮತ್ತು ನಿಯಂತ್ರಣ ಕಾಯಿದೆ 2007 ಮತ್ತು ಪರಿಷ್ಕೃತ ಕಾಯಿದೆ 2011 ರಾಷ್ಟ್ರಪತಿಯವರ ಅಂಕಿತದ ನಿರೀಕ್ಷೆಯಲ್ಲಿದೆ. ಈ ಕಾಯಿದೆ ಅನುಷ್ಠಾನಕ್ಕೆ ಬಂದಲ್ಲಿ ಒತ್ತುವರಿ ಪ್ರಕರಣಗಳ ವಿಚಾರಣೆ ಮತ್ತು ಇತ್ಯರ್ಥಕ್ಕಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬಹುದಾಗಿದೆ. ಆದಕಾರಣ, ಪಶುಸಂಗೋಪನಾ ಮತ್ತು ಮುಜರಾಯಿ ಹಾಗೂ ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ.ಜಯಚಂದ್ರ ಅವರು ಕೂಡಲೇ ನವದೆಹಲಿಗೆ ತೆರಳಿ ರಾಷ್ಟ್ರಪತಿ ಅಂಕಿತಕ್ಕೆ ಮನವಿ ಸಲ್ಲಿಸಲಿದ್ದಾರೆ.
ಪುರವಂಕರ ಡೆವಲಪರ್ಸ್ ಸೇರಿದಂತೆ ಹಲವು ಸಂಸ್ಥೆಗಳು ಕೆರೆ ಅಂಗಳ ಒತ್ತುವರಿ ಹಾಗೂ ರಸ್ತೆ ಒತ್ತುವರಿ ಮಾಡಿವೆ ಎಂಬುದು ವರದಿಯಲ್ಲಿ ಬೆಳಕಿಗೆ ಬಂದಿವೆ.
ಈ ಹಿನ್ನೆಲೆಯಲ್ಲಿ ಭೂ ಮಾಫಿಯಾ ವಿರುದ್ಧ ಸರ್ಕಾರ ದಿಟ್ಟ ಕ್ರಮ ಜರುಗಿಸಲು ಬೆಂಬಲ ವ್ಯವಸ್ಥೆಯನ್ನುಸೃಜಿಸುವ ಅವಶ್ಯಕತೆ ಇದೆ ಎಂದು ಸಭೆ ಒಕ್ಕೊರಲ ಅಭಿಪ್ರಾಯಪಟ್ಟಿತು.