ಶ್ರೀನಗರ : ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಪುಂಡಾಟಿಕೆ ಮುಂದುವರೆಸಿದ್ದು, ಉದ್ವಿಗ್ನಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಭಾರತ-ಪಾಕಿಸ್ತಾನ ನಡುವೆ ಮಾತುಕತೆ ನಡೆಸಲು ವಿಶ್ವಸಂಸ್ಥೆ ಇಂಗಿತ ವ್ಯಕ್ತಪಡಿಸಿದೆ.
ನಿರಂತರವಾಗಿ ಗಡಿ ನಿಯಮ ಉಲ್ಲಂಘನೆಮಾಡುತ್ತಿರುವ ಪಾಕ್ ಸೇನೆ, ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಭಾರತೀಯ ಸೇನಾ ಶಿಬಿರಗಳನ್ನು ಗುರಿಯಾಗಿಸಿಕೊಂಡು ಪಾಕ್ ಗುಂಡಿನ ದಾಳಿ ಮುಂದುವರೆದಿದ್ದು, ಭಾರತೀಯ ಯೋಧರೂ ಪ್ರತಿದಾಳಿ ನಡೆಸಿದ್ದಾರೆ. ಇದರಿಂದಾಗಿ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾ್ಗಿದೆ.
ಭಾರತ-ಪಾಕಿಸ್ತಾನ ಅಂತರಾಷ್ಟ್ರೀಯ ಗಡಿಯಲ್ಲಿ ಹೆಚ್ಚುತ್ತಿರುವ ಗುಂಡಿನ ದಾಳಿ ಹಿನ್ನಲೆಯಲ್ಲಿ ಭಾರತ-ಪಾಕಿಸ್ತಾನ ಚರ್ಚೆ ನಡೆಸಲು ವಿಶ್ವಸಂಸ್ಥೆ ಮಧ್ಯಸ್ಥಿಕೆ ವಹಿಸಲಿದೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್ ಕೀ ಮೂನ್ ಇಂಗಿತ ವ್ಯಕ್ತಪಡಿಸಿದ್ದಾರೆ. ರಾಜತಾಂತ್ರಿಕವಾಗಿಯೇ ಸಮಸ್ಯೆ ಬಗೆಹರಿಸಿಕೊಳ್ಳಬೇಕಿದೆ. ಹೀಗಾಗಿ ರಾಜತಾಂತ್ರಿಕಬವಾಗಿಯೇ ಬಗೆಹರಿಸಿಕೊಳ್ಳಿ ಎಂದು ಉಭಯ ಸರ್ಕಾರಗಳಿಗೆ ಸಲಹೆ ನೀಡಿದ್ದಾರೆ. ಅಲ್ಲದೇ ಗುಂಡಿನ ದಾಳಿ ಬಗ್ಗೆ ವಿಶ್ವಸಂಸ್ಥೆ ಆತಂಕ ವ್ಯಕ್ತಪಡಿಸಿದೆ.
ಜಮ್ಮು-ಕಾಶ್ಮೀರದ ಆರ್ನಿಯಾ ಸೆಕ್ಟರ್ ನಲ್ಲಿ ಬಿಎಸ್ ಫ್ ನ 70 ಸೇನಾ ಶಿಬಿರಗಳನ್ನು ಗುರಿಯಾಗಿಸಿಕೊಂಡು ಮುಂಜಾನೆ ಪಾಕ್ ಸೇನೆ ನಿರಂತರ ಗುಂಡಿನ ದಾಳಿ ನಡೆಸಿತ್ತು. ಘಟನೆಯಲ್ಲಿ ಮೂವರು ಯೋಧರು ಹಾಗೂ 8ಕ್ಕೂ ಹೆಚ್ಚು ನಾಗರಿಕರು ಗಾಯಗೊಂಡಿದ್ದರು.
ಸದ್ಯದ ವರದಿ ಪ್ರಕಾರ ಜಮ್ಮು-ಕಾಶ್ಮೀರದ ಸಾಂಬಾ ಸೆಕ್ಟರ್ ನಲ್ಲಿ ಪಾಕ್ ಸೇನೆ ನಡೆಸಿದ ಗುಂಡಿನ ದಾಳಿಗೆ ಓರ್ವ ಮಹಿಳೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ನಡುವೆ ಪಾಕ್ ಸೇನೆ ಗಡಿಯಲ್ಲಿ ಗುಂಡಿನ ದಾಳಿ ಮುಂದುವರೆಸಿದ್ದು, ಬಿಎಸ್ ಎಫ್ ಯೋಧರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಪಾಕಿಸ್ತಾನದ 40 ಔಟ್ ಪೋಸ್ಟ್ ಗಳ ಮೇಲೆ ಭಾರತೀಯ ಯೋಧರು ಗುಂಡಿನ ದಾಳಿ ನಡೆಸಿದ್ದು, ಎರಡು ಔಟ್ ಪೋಸ್ಟ್ ಗಳನ್ನು ಧ್ವಂಸಗೊಳಿಸಿದ್ದಾರೆ.