ಬೆಂಗಳೂರು : ಬೆಳಗಾವಿಯಲ್ಲಿ ಮರಾಠಿ ನಾಮಫಲಕ ಹಾಕಿ ಪದೇ ಪದೇ ಕ್ಯಾತೆ ತೆಗೆಯುವ ಎಂ.ಇ.ಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂದು ರಾಜ್ಯದ ಹಿರಿಯ ಸಾಹಿತಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕ ವಾದ ಮಂಡಿಸಬೇಕಿರುವ ಹಿನ್ನೆಲೆಯಲ್ಲಿ ಅ.10ರಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಹಿರಿಯ ಸಾಹಿತಿಗಳು ಹಾಗೂ ಕನ್ನಡ ಪರ ಹೋರಾಟಗಾರರೊಂದಿಗೆ ಮಹತ್ವದ ಸಭೆ ನಡೆಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಸಾಹಿತಿಗಳು ಎಂ.ಇ.ಎಸ್ ನಿಷೇಧ ಮಾಡಬೇಕೆಂದು ಒಕ್ಕೊರಲಿನಿಂದ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಗಡಿ ಅಭಿವೃದ್ಧಿ ಪ್ರಧಿಕಾರ ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಗಡಿ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡಬೇಕು ಜೊತೆಗೆ ಗಡಿ ಸಲಹಾ ಸಮಿತಿ ರಚನೆ ಮಾಡಬೇಕು ಎಂದು ಸಾಹಿತಿಗಳು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಗಡಿ ಭಾಗಗಳಲ್ಲಿ ಕನ್ನಡದ ವಾತಾವರಣ ನಿರ್ಮಾಣವಾಗಬೇಕು ಗಡಿ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಆದ್ಯತೆ ನೀಡಬೇಕು ಎಂದು ಸಭೆ ಮುಖ್ಯಮಂತ್ರಿಗೆ ಸಲಹೆ ನೀಡಿದೆ. ಗಡಿ ಭಾಗಗಳಿಗೆ ಸಂಬಂಧಿಸಿದಂತೆ ಇತಿಹಾಸದಲ್ಲಿನ ದಾಖಲೆಗಳನ್ನು ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಹಾಗೂ ಗಡಿ ಸಲಹಾ ಸಮಿತಿ ಸಲ್ಲಿಸಿರುವ ಕನ್ನಡಿಗರ ಸಾಮಾಜಿಕ ಜೀವನದ ಬಗ್ಗೆ ದಾಖಲೆಗಳನ್ನು ಸಲ್ಲಿಸಲು ಸಿ.ಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಬೆಳಗಾವಿಯ ಎಳ್ಳೂರು ಘಟನೆಯಂತಹ ಚಟುವಟಿಕೆಗಳಿಗೆ ಮಹಾರಾಷ್ಟ್ರ ಪ್ರೋತ್ಸಾಹ ನೀಡುತ್ತಿದೆ. ಇಂತಹ ಘಟನೆಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಕನಿಷ್ಠ 2-3 ತಿಂಗಳಿಗೊಮ್ಮೆ ಕನ್ನಡಪರ ಸಂಘಟನೆಗಳೊಂದಿಗೆ ಗಡಿ ಸಮಸ್ಯೆಗಳ ಕುರಿತು ಸರ್ಕಾರ ಚರ್ಚಿಸಬೇಕು. ಬೆಳಗಾವಿ ಹಾಗೂ ಗಡಿ ಭಾಗದ ಇತರ ಸ್ಥಳಗಳಿಗೆ ಕನ್ನಡದ ಹೆಸರುಗಳನ್ನೇ ಇಡಬೇಕೆಂದು ಸಭೆಯಲ್ಲಿ ಭಾಗವಹಿಸಿದ್ದವರು ಸಿ.ಎಂ ಗೆ ಮನವಿ ಮಾಡಿದ್ದಾರೆ.
ಸಭೆಯಲ್ಲಿದ್ದವರ ಮನವಿಗೆ ಸ್ಪಂದಿಸಿರುವ ಸಿ.ಎಂ ಮಹಾರಾಷ್ಟ್ರದ ಕ್ಯಾತೆಗೆ ತಕ್ಕ ಉತ್ತರ ನೀಡುವ ತಾಕತ್ತು ನಮಗಿದೆ ಮಹಾರಾಷ್ಟ್ರಕ್ಕೆ ಒಂದು ಇಂಚು ನೆಲವನ್ನೂ ಬಿಟ್ಟುಕೊಡುವುದಿಲ್ಲ ಎಂದು ಸಿ.ಎಂ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಹಿರಿಯ ಸಾಹಿತಿಗಳಾದ ಚಿದಾನಂದ ಮೂರ್ತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಮಾಜಿ ಸಂಸದರಾದ ವಿಶ್ವನಾಥ್, ಚಂದ್ರೇಗೌಡ, ಬರಗೂರು ರಾಮಚಂದ್ರಪ್ಪ, ನ್ಯಾ.ರಾಮಾ ಜೋಯಿಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.