ಹುಬ್ಬಳ್ಳಿ : ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಸಂಪನ್ಮೂಲ ಕ್ರೂಢಿಕರಣದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ, ಸಂಸದ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆರ್ಥಿಕ ಸ್ಥಿತಿ ದಿವಾಳಿಯಾಗಿದೆ. ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರಲ್ಲು ಸರ್ಕಾರ ಎಡವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಅವರನ್ನು ಬೈಯ್ಯುವುದರಿಂದ ಆಡಳಿತ ನಡೆಸಲಾಗದು, ಅಭಿವೃದ್ಧಿಯನ್ನೂ ಮಾಡಲಾಗದು ಎಂದರು.
ಬಡವರಿಗಾಗಿ ಜಾರಿಯಾದ ಭಾಗ್ಯಲಕ್ಷ್ಮೀ ಯೋಜನೆ ಬಿಜೆಪಿ ಸರ್ಕಾರದ ಕೊಡುಗೆ. ಬಿಜೆಪಿ ಅವಧಿಯಲ್ಲಿ 3 ಲಕ್ಷ ಫಲಾನುಭವಿಗಳಿದ್ದರು. ಆದರೆ ಕಳೆದ ವರ್ಷ ಕೇವಲ 1.45 ಲಕ್ಷ ಫಲಾನುವಿಗಳಿದ್ದರು. ಯೋಜನೆಯನ್ನು ಸಾರ್ಪಕವಾಗಿ ಫಲಾನುಭವಿಗಳಿಗೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದರು.
ಕಬ್ಬು ಬೆಳೆಗಾರರಿಗೆ ನೀಡಿದ ಭರವೆಸಗಳನ್ನು ಶೀಘ್ರವೇ ಈಡೇರಿಸುವಂತೆ ಆಗ್ರಹಿಸಿದ ಯಡಿಯೂರಪ್ಪ, ಮುಂದಿನ ಬೆಳಗಾವಿ ಅಧಿವೇಶನ ನಡೆಯುವುದಕ್ಕೂ ಮುನ್ನ ಕಬ್ಬು ಬೆಳೆಗಾರರಿಗೆ ನೀಡಬೇಕಾದ ಬಾಕಿ ಹಣ ಪಾವತಿಸಿ, ಬೇಡಿಕೆ ಈಡೇರಿಸದಿದ್ದಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಇದೇ ವೇಳೆ ದೇಶದಲ್ಲಿ ಕಾಂಗ್ರೆಸ್ ಗೆ ದಯನೀಯ ಸ್ಥಿತಿ ಬಂದಿದೆ. ಶೀಘ್ರವೇ ಕಾಂಗ್ರೆಸ್ ಪ್ರಾದೇಶಿಕ ಪಕ್ಷವಾಗಲಿದೆ ಎಂದರು. ಅಲ್ಲದೇ ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲು ಖಚಿತ ಎಂದು ತಿಳಿಸಿದರು.