ನಾಗ್ಪುರ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಯ ಆಸೆ ಹೊಂದಿಲ್ಲ, ರಾಜ್ಯ ರಾಜಕಾರಣಕ್ಕೆ ಮರಳುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ನಾಗ್ಪುರದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಹುಮತ ಸಿಗಲಿದ್ದು, ವಿದರ್ಬ ಪ್ರಾಂತದ 40-45 ಸ್ಥಾನಗಳನ್ನು ಪಡೆಯುವ ಮೂಲಕ ಒಟ್ಟಾರೆ ರಾಜ್ಯದಲ್ಲಿ ಬಿಜೆಪಿಗೆ 150-160 ಸ್ಥಾನಗಳು ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ, ಮಹಾರಾಷ್ಟ್ರ ಬಿಜೆಪಿಯಲ್ಲಿ ಸಿಎಂ ಹುದ್ದೇಗೇರಲು ಅತ್ಯುತ್ತಮ, ಸಮರ್ಥ ನಾಯಕರಿದ್ದಾರೆ. ಕೇಂದ್ರದಲ್ಲಿ ನಾನು ಆರಾಮವಾಗಿದ್ದು, ರಾಜ್ಯ ರಾಜಕಾರಣಕ್ಕೆ ಮರಳುವ ಆಸೆಯಿಲ್ಲ ಎಂದು ಸ್ಪಷ್ಟಪಡಿಸಿದರು.
ಚುನಾವಣಾ ಫಲಿತಾಂಶದ ಬಳಿಕ ಕೇಂದ್ರ ನಾಯಕರು ಮುಖ್ಯಮಂತ್ರಿ ಅಭ್ಯರ್ಥಿ ಹೆಸರು ಪ್ರಕಟಿಸುತ್ತಾರೆ ಎಂದ ಅವರು, ಕೇಂದ್ರದಲ್ಲಿನ ಎನ್.ಡಿಎ ನೇತೃತ್ವದ ಸರ್ಕಾರ ಮತ್ತು ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ಬಿಜೆಪಿ ಸರ್ಕಾರ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ವೇಗ ನೀಡಲಿದೆ ಎಂದು ತಿಳಿಸಿದರು.