ಬೆಂಗಳೂರು : ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ.
ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿರುವ ದಿಗ್ವಿಜಯ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿದ್ದಾರೆ.
ಈ ವೇಳೆ ನಿಗಮ ಮಂಡಳಿ ನೇಮಕಾತಿ, ಪಕ್ಷ ಸಂಘಟನೆ, ಸಚಿವ ಸಂಪುಟ ವಿಸ್ತರಣೆ ಮೊದಲಾದ ವಿಚಾರಗಳ ಬಗ್ಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಈ ನಡುವೆ ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಲು ಯತ್ನಿಸಿದರೂ ಸಾಧ್ಯವಾಗಿಲ್ಲ, ನಿಗದಿತ ಕಾರ್ಯಕ್ರಮದ ಪ್ರಕಾರ ಕುಮಾರಕೃಪಾ ಅತಿಥಿ ಗೃಹಕ್ಕೆ ದಿಗ್ವಿಜಯ್ ಸಿಂಗ್ ಆಗಮಿಸುವ ನಿರೀಕ್ಷೆಯಲ್ಲಿ ಆಕಾಂಕ್ಷಿಗಳು ನೆರೆದಿದ್ದರು. ಆದರೆ ತಡರಾತ್ರಿವರೆಗೂ ದಿಗ್ವಿಜಯ್ ಸಿಂಗ್ ಕುಮಾರಕೃಪಾಗೆ ಬರಲಿಲ್ಲ ಹೀಗಾಗಿ ಆಕಾಂಕ್ಷಿಗಳು ವಾಪಸ್ಸಾಗಿದ್ದಾರೆ.
ಮೂಲಗಳ ಪ್ರಕಾರ ಈ ತಿಂಗಳ ಕೊನೆಯಲ್ಲಿ ನಿಗಮ ಮಂಡಳಿ ನೇಮಕಾತಿ ಪಟ್ಟಿ ಪ್ರಕಟವಾಗಲಿದೆ ಎನ್ನಲಾಗುತ್ತಿದೆ.