ಬೆಂಗಳೂರು : ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ ಸ್ಥಾನ ನೀಡಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ ನಡೆಯಲಿದೆ. ಆದರೆ ಇದರಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಮಾಡುವುದಿಲ್ಲ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಮಕೈಗೊಳ್ಳಲಿದ್ದಾರೆ ಎಂದರು.
ಡಿಸಿಎಂ ಪಟ್ಟ ನೀಡುವಂತೆ ಪರಮೇಶ್ವರ್ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ ಆದರೆ ಡಿಸಿಎಂ ಆಗಬೇಕೆಂದು ಪರಮೇಶ್ವರ್ ಇಚ್ಛಿಸುತ್ತಿಲ್ಲ, ಡಿಸಿಎಂ ಹುದ್ದೆ ನೀಡಿ ಎಂದು ಅವರು ಕೇಳುತ್ತಿಲ್ಲ ಎಂದು ತಿಳಿಸಿದರು. ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಪರಮೇಶ್ವ್ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗುವುದು ಎಂದು ಭರವಸೆ ನೀಡಿದರು.
ನಿಗಮ ಮಂಡಳಿ ನೇಮಕಾತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಜತೆ ಚರ್ಚೆ ನಡೆಸಿದ್ದೇನೆ ಶೀಘ್ರದಲ್ಲಿಯೇ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ನಡೆಯಲಿದ್ದು, ಯುವಕರು, ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಮಾಜಿ ಶಾಸಕರಿಗೆ, ಸಚಿವರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡುವುದಿಲ್ಲ ಪಕ್ಷದಲ್ಲಿ ಅವರಿಗೆ ಬೇರೆ ಸ್ಥಾನ ನೀಡಲಾಗುವುದು. ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳನ್ನು ಪಕ್ಷ ಸಂಘಟನೆಗಾಗಿ ಬಳಸಿಕೊಳ್ಳಲಾಗುತ್ತದೆ ಎಂದರು.
ಈ ನಡುವೆ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ದಿಗ್ವಿಜಯ್ ಸಿಂಗ್ ಪ್ರಧಾನಿ ಮೋದಿಯವರನ್ನು ಶ್ಲಾಘಿಸಿದ್ದಾರೆ.
ಜಪಾನ್ ಜತೆಗಿನ ದ್ವಿಪಕ್ಷೀಯ ಮಾತುಕತೆ ಮೂಲಕ ಬಾಂಧವ್ಯ ವೃದ್ಧಿಯಾಗಲಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತಮ ಕೆಲಸ ಮಾಡಿದ್ದಾರೆ. ಜಪಾನ್ ನೊಂದಿಗೆ ಉತ್ತಮ ಸಂಬಂಧ ಹೊಂದಿರುವುದು ಒಳ್ಳೆಯದು ಎಂದು ಪ್ರಧಾನಿ ಮೋದಿ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದರು.