ಮುಂಬೈ : 'ಮಹಾರಾಷ್ಟ್ರ' ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳಲು ಇನ್ನು 24ಗಂಟೆಗಳಷ್ಟೇ ಬಾಕಿ ಇದೆ. ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಧಾನಸಭೆಯತ್ತ ಎಲ್ಲರ ಗಮನ ನೆಟ್ಟಿದೆ.
ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಹುಮತ ಪಡೆದು ಸರ್ಕಾರ ರಚಿಸಲು ಅರ್ಹತೆ ಪಡೆಯುವ ಏಕೈಕ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಬಗ್ಗೆ ದೇಶಾದ್ಯಂತ ಕುತೂಹಲ ತೀವ್ರಗೊಂಡಿದೆ. ಇದಕ್ಕಾಗಿ ಈಗಾಗಲೇ ಲೆಕ್ಕಾಚಾರಗಳು ಗರಿಗೆದರಿದ್ದು ಬಿಜೆಪಿಗೆ ಬಹುಮತ ದೊರೆತಿದ್ದೇ ಆದಲ್ಲಿ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗುವ ಸಾಧ್ಯತೆಗಳು ದಟ್ಟವಾಗಿದೆ.
ದಿನಕ್ಕೆ 15ಗಂಟೆಗಳ ಕಾಲ ಕೆಲಸ ಹಾಗೂ ವಿವಾದಗಳಿಂದ ಅಂತರ ಕಾಯ್ದುಕೊಂಡಿರುವ ಶುದ್ಧ ವ್ಯಕ್ತಿತ್ವವೇ ದೇವೇಂದ್ರ ಫಡ್ನವೀಸ್ ಅವರನ್ನು ಮುಖ್ಯಮಂತ್ರಿಯ ಪಟ್ಟಕ್ಕೇರಿಸುವ ಸಾಧ್ಯತೆಗಳಿವೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ ಮಾಜಿ ಕೇಂದ್ರ ಸಚಿವ, ಮಹಾರಾಷ್ಟ್ರ ಬಿಜೆಪಿಯ ಪ್ರಶ್ನಾತೀತ ನಾಯಕ ಗೋಪಿನಾಥ್ ಮುಂಡೆ ನಿಧನದ ನಂತರ 'ಮಹಾ'ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾರೆಂಬ ಪ್ರಶ್ನೆ ಉಂಟಾಗಿತ್ತು. ಚುನಾವಣೆಗೂ ಮುನ್ನ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ. ಒಂದು ಮೂಲಗಳ ಪ್ರಕಾರ, ಗೋಪಿನಾಥ್ ಮುಂಡೆ ಅವರ ಪುತ್ರಿ ಪಂಕಜಾ ಅವರನ್ನು ಮುಖ್ಯಮಂತ್ರಿ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.
ಆದರೆ ಬಿಜೆಪಿ ಸರ್ಕಾರ ರಚನೆ ಸಂದರ್ಭದಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಆರ್.ಎಸ್.ಎಸ್ ನೊಂದಿಗೆ ದೇವೇಂದ್ರ ಫಡ್ನವೀಸ್ ಉತ್ತಮ ಸಂಬಂಧ ಹೊಂದಿದ್ದಾರೆ. ಅಲ್ಲದೇ ಆಡಳಿತ ದಕ್ಷತೆಯನ್ನೂ ಹೊಂದಿರುವ ವ್ಯಕ್ತಿತ್ವದವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನೇ ಮುಖ್ಯಮಂತ್ರಿ ಮಾಡಲಾಗುತ್ತದೆ ಎಂದು ಬಿಜೆಪಿಯ ಅಧಿಕೃತ ಮೂಲಗಳು ತಿಳಿಸಿವೆ ಎಂದು ಕೆಲ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ದೇವೇಂದ್ರ ಫಡ್ನವೀಸ್ ಅವರನ್ನೇ ಮುಖ್ಯಮಂತ್ರಿ ಮಾಡುವುದರಿಂದ ಬಿಜೆಪಿಗೆ ಪ್ರಾದೇಶಿಕವಾಗಿ ಮತ್ತೊಂದು ಲಾಭವಿದೆ. ದೇವೇಂದ್ರ ಫಡ್ನವೀಸ್ ವಿಧರ್ಭ ಪ್ರದೇಶಕ್ಕೆ ಸೇರಿದವರಾಗಿದ್ದಾರೆ. ವಿಧರ್ಭ ಪ್ರದೇಶವನ್ನು ಅಭಿವೃದ್ಧಿಯಿಂದ ನಿರ್ಲಕ್ಷಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕೆಂಬ ಕೂಗೂ ಕೇಳಿಬಂದಿದೆ. ಒಂದು ವೇಳೆ ವಿಧರ್ಭ ಪ್ರದೇಶದವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಆಗ ಪ್ರತ್ಯೇಕ ರಾಜ್ಯದ ಬೇಡಿಕೆ ವಿಷಯವನ್ನು ನಿಯಂತ್ರಿಸಬಹುದು ಎಂಬುದು ಬಿಜೆಪಿಯ ಲೆಕ್ಕಾಚಾರವಾಗಿದೆ.
ಒಂದು ವೇಳೆ ಬಿಜೆಪಿಗೆ ಪೂರ್ಣ ಬಹುಮತ ದೊರೆಯದೇ ಶಿವಸೇನೆಯೊಂದಿಗೆ ಮೈತ್ರಿ ಸರ್ಕಾರ ರಚನೆ ಮಾಡಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣವಾದರೆ ಪಂಕಜಾ ಅವರನ್ನು ಮುಖ್ಯಮಂತ್ರಿ ಮಾಡುವ ಸಾಧ್ಯತೆಗಳು ದಟ್ಟವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.