ಮುಂಬೈ : 'ಮಹಾರಾಷ್ಟ್ರ'ದಲ್ಲಿ ಬಿಜೆಪಿಯೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಲು ಶಿವಸೇನೆ ಒಪ್ಪಿಗೆ ಸೂಚಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಸರ್ಕಾರ ರಚನೆ ಸಂಬಂಧ ಬಿಜೆಪಿ ನಾಯಕರು ಶಿವಸೇನೆ ನಾಯಕರೊಂದಿಗೆ ಸಭೆ ನಡೆಸಿದ್ದು ಸಮ್ಮಿಶ್ರ ಸರ್ಕಾರ ರಚನೆ ಮಾಡಲು ಉಭಯ ನಾಯಕರೂ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚಿನ ವರದಿ ಪ್ರಕಾರ ಶಿವಸೇನೆಯ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು ಸಂಜೆ ವೇಳೆಗೆ ಬಿಜೆಪಿಗೆ ಬೆಂಬಲ ನೀಡುವ ಸಂಬಂಧ ಶಿವಸೇನೆ ಅಧಿಕೃತ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಮಹಾರಾಷ್ಟ್ರಕ್ಕೆ ರಾಜನಾಥ್ ಸಿಂಗ್ ಹಾಗೂ ಜೆ.ಪಿ ನಡ್ಡಾ ಅವರನ್ನು ವೀಕ್ಷಕರಾಗಿ ನೇಮಿಸಲಾಗಿದ್ದು ಸರ್ಕಾರ ರಚನೆ ಸಂಬಂಧ ಅ.20ರಂದು ವೀಕ್ಷಕರು ಮಹಾರಾಷ್ಟ್ರಕ್ಕೆ ಭೇಟಿ ನೀಡಬೇಕಿತ್ತು. ಆದರೆ ಒಂದು ದಿನದ ಮಟ್ಟಿಗೆ ಭೇಟಿ ದಿಢೀರ್ ಮುಂದೂಡಿಕೆಯಾಗಿದೆ. ಶಿವಸೇನೆ ಬಿಜೆಪಿಗೆ ಬೆಂಬಲ ನೀಡಲು ತೀರ್ಮಾನಿಸಿದೆ ಎಂಬುದಕ್ಕೆ ಪೂರಕವಾಗಿ ಈ ಬೆಳವಣಿಗೆ ನಡೆದಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಉಭಯ ರಾಜ್ಯಗಳಲ್ಲಿ ಬಿಜೆಪಿ ಬಹುಮತ ದೊರೆತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವರಿಗೆ ಔತಣಕೂಟ ಏರ್ಪಡಿಸಿದ್ದಾರೆ. ಈ ವೇಳೆ 'ಮಹಾ'ಮೈತ್ರಿಯೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ 122 ಸ್ಥಾನಗಳನ್ನು ಪಡೆದಿರುವ ಬಿಜೆಪಿಗೆ ಸರ್ಕಾರ ರಚಿಸಲು 23 ಶಾಸಕರ ಕೊರತೆ ಇದೆ. ಸರ್ಕಾರ ರಚಿಸಲು ಬಿಜೆಪಿಗೆ ಬಾಹ್ಯ ಬೆಂಬಲ ನೀಡುವುದಾಗಿ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಎನ್.ಸಿ.ಪಿ ಘೋಷಿಸಿತ್ತು. ಆದರೆ ಆರ್.ಎಸ್.ಎಸ್ ನಾಯಕರು ಎನ್.ಸಿ.ಪಿಯೊಂದಿಗೆ ಮೈತ್ರಿ ಸರ್ಕಾರ ರಚಿಸುವುದು ಬೇಡ ಎಂದು ಬಿಜೆಪಿ ಹಿರಿಯ ನಾಯಕರಿಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ-ಶಿವಸೇನೆ ಸರ್ಕಾರ ರಚನೆಯಾಗುವ ಸಾಧ್ಯತೆಗಳೇ ಹೆಚ್ಚಿವೆ.