ಬೆಂಗಳೂರು : ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಇಲಾಖೆಗೆ ವಿಶೇಷ ಯೋಜನೆಗಳನ್ನು ಘೋಷಿಸಿದ್ದಾರೆ.
ಅ.21ರಂದು ಬೆಂಗಳೂರಿನ ಸಿ.ಎ.ಆರ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಎಂ ಸಿದ್ದರಾಮಯ್ಯ ಪೊಲೀಸ್ ಇಲಾಖೆಗೆ ಹೊಸ ಯೋಜನೆಗಳನ್ನು ಘೋಷಿಸಿದ್ದು ಈ ವರೆಗೂ ಮುಖ್ಯಪೇದೆಗಳಿಗೆ ಮಾತ್ರ ಸೀಮಿತವಾಗಿದ್ದ ವಿಮಾ ಸೌಲಭ್ಯ ಎ.ಎಸ್.ಐ ಹಾಗೂ ಸಬ್ ಇನ್ಸ್ಪೆಕ್ಟರ್ ಗಳಿಗೂ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ. ವಿಮಾ ಯೋಜನೆಯ ಮೊತ್ತವನ್ನು 10 ಲಕ್ಷ ರೂ ಗಳಿಂದ 20ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ ಎಂದು ಸಿ.ಎಂ ಇದೇ ವೇಳೆ ತಿಳಿಸಿದ್ದಾರೆ. ಈ ಯೋಜನೆಯಿಂದ 83,939 ಸಿಬ್ಬಂದಿಗಳು ಅನುಕೂಲ ಪಡೆಯಲಿದ್ದಾರೆ.
ಭಯೋತ್ಪಾದನೆ ಹಾಗೂ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಮೃತಪಟ್ಟ ಪೊಲೀಸರಿಗೆ ನೀಡಲಾಗುತ್ತಿದ್ದ 5 ಲಕ್ಷರೂಗಳ ಪರಿಹಾರ ಧನವನ್ನು 30 ಲಕ್ಷಕ್ಕೆ. ಶಾಶ್ವತ ಅಂಗವಿಕಲರಾದವರಿಗೆ ನೀಡಲಾಗುತ್ತಿದ್ದ 1 ಲಕ್ಷ ರೂಗಳ ಪರಿಹಾರ ಧನವನ್ನು 10 ಲಕ್ಷಕ್ಕೆ ಗಾಯಗೊಂಡರೆ ನೀಡಲಾಗುತ್ತಿದ್ದ ಪರಿಹಾರ ಮೊತ್ತವನ್ನು ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳು ಗಾಯಗೊಂಡರೆ ನೀಡಲಾಗುತ್ತಿದ್ದ ಪರಿಹಾರ ಮೊತ್ತವನ್ನು 20 ಸಾವಿರದಿಂದ 2 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ.
ಪೊಲೀಸ್ ಅಧಿಕಾರಿಗಳ ಮಕ್ಕಳಿಗೆ ಗುಣಮಟ್ಟದ ವಿದ್ಯಾಭ್ಯಾಸ ನೀಡಲು ಉಡುಪಿ, ಗುಲ್ಬರ್ಗಾ, ದಾವಣಗೆರೆ, ಬೆಳಗಾವಿಯಲ್ಲಿ ತಲಾ 15ಕೋಟಿ ರೂ ವೆಚ್ಚದಲ್ಲಿ ಪೊಲೀಸ್ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅ.21ರಂದು ದೇಶಾದ್ಯಂತ ಪೊಲೀಸ್ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತಿದೆ.