ಜೈಪುರ : ದುರಾಡಳಿತ ನಡೆಸಿದ್ದರ ಪರಿಣಾಮ ಕಾಂಗ್ರೆಸ್ ದೇಶಾದ್ಯಂತ ತನ್ನ ನೆಲೆ ಕಳೆದುಕೊಳ್ಳುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಅಧಿಕಾರಾವಧಿಯಲ್ಲಿ ನಡೆದಿದ್ದ ಭ್ರಷ್ಟಾಚಾರದ ಪ್ರಕರಣಗಳು ಜೀವಪಡೆದುಕೊಳ್ಳುತ್ತಿರುವುದು ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಭ್ರಷ್ಟಾಚಾರದ ಪ್ರಕರಣಗಳ ಬಗ್ಗೆ ತನಿಖೆಗೆ ಆದೆಶ ನೀಡುತ್ತಿದೆ. ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ಆಂಬುಲೆನ್ಸ್ ಹಗರಣದ ಕುರಿತು ಮುಖ್ಯಮಂತ್ರಿ ವಸುಂಧರಾ ರಾಜೇ ಸಿ.ಬಿ.ಐ ತನಿಖೆಗೆ ಆದೇಶಿಸಿದ್ದಾರೆ. ಈ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಮಾಜಿ ಕೇಂದ್ರ ಸಚಿವ ಸಚಿನ್ ಪೈಲೆಟ್ ಅವರನ್ನು ಪ್ರಮುಖ ಆರೋಪಿಗಳು ಎಂದು ಹೇಳಲಾಗಿದೆ.
2011ರಲ್ಲಿ ಸರ್ಕಾರ ಆರಂಭಿಸಿದ 108 ಆಂಬುಲೆನ್ಸ್ ಸೇವೆಗೆ ಟೆಂಡರ್ ಕರೆಯುವ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದರು. 14 ಕೋಟಿ ಹಗರಣದಲ್ಲಿ ಕಾಂಗ್ರೆಸ್ ನ ಇಬ್ಬರು ನಾಯಕರ ಪಾತ್ರ ಇರುವುದರ ಬಗ್ಗೆ ಎಫ್.ಐ.ಆರ್ ನಲ್ಲಿ ಪ್ರಸ್ತಾಪಿಸಲಾಗಿದೆ.