ನವದೆಹಲಿ : 'ಮಹಾರಾಷ್ಟ್ರ'ದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯ ಬಗ್ಗೆ ನಿರ್ಧಾರ ಕೈಗೊಳ್ಳಲು ವಿಳಂಬ ಧೋರಣೆ ಅನುಸರಿಸುತ್ತಿರುವ ಬಿಜೆಪಿ, ತೆರೆ ಮರೆಯಲ್ಲಿ ಸ್ವತಂತ್ರವಾಗಿ ಸರ್ಕಾರ ರಚಿಸುವ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ.
ಬಿಜೆಪಿಗೆ ಎನ್.ಸಿ.ಪಿ, ಶಿವಸೇನೆ ಬೆಂಬಲ ನೀಡಲು ಸಿದ್ಧವಿದ್ದರೂ ಏಕಾಂಗಿಯಾಗಿ ಸರ್ಕಾರ ರಚಿಸುವ ಬಗ್ಗೆ ಬಿಜೆಪಿ ಹೈಕಮಾಂಡ್ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಪಕ್ಷದ ಅಧಿಕೃತ ಮೂಲಗಳು ತಿಳಿಸಿವೆ. ಪಕ್ಷೇತರ ಶಾಸಕರ ಬೆಂಬಲ ಪಡೆದು ಸ್ವತಂತ್ರವಾಗಿ ಸರ್ಕಾರ ರಚನೆ ಮಾಡಲು ಬಿಜೆಪಿ ಸಿದ್ಧತೆ ನಡೆಸಿದೆ.
288 ವಿಧಾನಸಭಾ ಕ್ಷೇತ್ರಗಳಲ್ಲಿ 123 ಸ್ಥಾನಗಳನ್ನು ಪಡೆದಿರುವ ಬಿಜೆಪಿಗೆ ಏಕಾಂಗಿಯಾಗಿ ಸರ್ಕಾರ ರಚಿಸಲು 21 ಶಾಸಕರ ಬೆಂಬಲ ಅಗತ್ಯವಿದೆ. ಮಹಾರಾಷ್ಟ್ರ ವಿಧಾನಸಭೆಗೆ 19 ಪಕ್ಷೇತರ ಶಾಸಕರು ಆಯ್ಕೆಯಾಗಿರುವುದು ಬಿಜೆಪಿಗೆ ಲಾಭವಾಗಿ ಪರಿಣಮಿಸಲಿದೆ.
ಪಕ್ಷೇತರ ಶಾಸಕರು ಬಿಜೆಪಿಗೆ ಬೆಂಬಲ ನೀಡಿದರೆ ಇನ್ನೂ ಇಬ್ಬರು ಶಾಸಕರ ಕೊರತೆ ಎದುರಾಗಲಿದೆ. ಈ ಕೊರತೆ ಸರಿದೂಗಿಸಲು 2 ಸ್ಥಾನ ಗಳಿಸಿರುವ ರಾಜ್ ಠಾಕ್ರೆ ನೇತೃತ್ವದ ಎಂ.ಎನ್.ಎಸ್ ಪಕ್ಷವನ್ನು ಬಿಜೆಪಿ ವಿಶ್ವಾಸಕ್ಕೆ ತೆಗೆದುಕೊಳ್ಳುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಬಿಜೆಪಿಯ ಈ ತಂತ್ರ ಫಲಿಸಿದಲ್ಲಿ ಸ್ವತಂತ್ರವಾಗಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಲಿದೆ.
ಅ.21ರ ಮುಂಬೈ ಭೇಟಿಯನ್ನು ರದ್ದುಗೊಳಿಸಿರುವ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಜೆ.ಪಿ ನಡ್ಡಾ, ದೀಪಾವಳಿ ನಂತರ ಸರ್ಕಾರ ರಚನೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.
ಮಹಾರಾಷ್ಟ್ರದಲ್ಲಿ 1995ರ ಸೂತ್ರದಂತೆ ಸಚಿವ ಸ್ಥಾನ ಹಂಚಿಕೆ ಮಾಡುವುದಾದರೆ ತಾವು ಬಿಜೆಪಿಗೆ ಬೆಂಬಲ ನೀಡುವುದಾಗಿ ಶಿವಸೇನೆ ಹೇಳಿದೆ. ಅಲ್ಲದೇ ಉಪಮುಖ್ಯಮಂತ್ರಿ ಹುದ್ದೆ, ಗೃಹ ಖಾತೆಯನ್ನು ಶಿವಸೇನೆಗೆ ನೀಡಬೇಕೆಂಬ ಬೇಡಿಕೆ ಮುಂದಿಟ್ಟಿದೆ. ಆದರೆ ಷರತ್ತಿನ ಬೆಂಬಲವನ್ನು ಬಿಜೆಪಿ ತಿರಸ್ಕರಿಸಿದ್ದು, ಬಿಜೆಪಿಯ ಮುಂದಿನ ನಡೆ ತೀವ್ರ ಕುತೂಹಲ ಉಂಟುಮಾಡಿದೆ. ಬಿಜೆಪಿ ಯಾವುದೇ ಪಕ್ಷದ ಸಹಾಯವಿಲ್ಲದೆ ಗದ್ದುಗೆಗೇರಲು ತಂತ್ರ ರೂಪಿಸುತ್ತಿದ್ದು, ಶೀಘ್ರದಲ್ಲೇ ಮಹತ್ವವಾದ ನಿರ್ಧಾರವನ್ನು ಕೈಗೊಳ್ಳಲಿದೆ.