ಬೆಂಗಳೂರು : ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶದ ಪರಿಣಾಮ ರಾಜ್ಯದ ಮೇಲೂ ಬೀರಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಆಡಳಿತ ನಿಯಂತ್ರಣವಿಲ್ಲ, ಇದಕ್ಕೆ ಐಎ ಎಸ್ ಅಧಿಕಾರಿ ರಶ್ಮಿ ಅವರ ಮೇಲಿನ ಹಲ್ಲೆಯೇ ಉದಾಹರಣೆ ಎಂದರು.
ಮಹಿಳಾ ಅಧಿಕಾರಿಯ ಮೇಲೆ ದೈಹಿಕ ಹಲ್ಲೆ ಖಂಡನೀಯ ಎಂದ ಅವರು. ರಶ್ಮಿ ಅವರಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಿ, ಧೈರ್ಯ ತುಂಬಬೇಕು ಎಂದು ತಿಳಿಸಿದರು.
ಅತಿವೃಷ್ಠಿ ಹಾಗೂ ಅನಾವೃಷ್ಠಿ ಪೀಡಿತ ಜಿಲ್ಲೆಗಳಿಗೆ ಸಮರ್ಪಕವಾದ ಪರಿಹಾರವನ್ನು ರಾಜ್ಯ ಸರ್ಕಾರ ನೀಡಿಲ್ಲ, ನೆರೆ ಸಂತ್ರಸ್ತರಿಗೆ ಬಿಡುಗಡೆಮಾಡಿರುವ ಪರಿಹಾರ ಧನ, ಖರ್ಚಾಗಿರುವ ಹಣದ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.
ಕಬ್ಬು ಬೆಳೆಗಾರರಿಗೆ ಬಾಕಿ ಹಣ ಪಾವತಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದ ಅವರು, ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ಸಣ್ಣ ಹಿಡುವಳಿದಾರರಿಗೆ ಸರ್ಕಾರ ನೋಟಿಸ್ ಜಾರಿ ಮಾಡಿದೆ. ಬಡವರಿಗೆ ಮಾತ್ರ ತೆರವು ನೋಟಿಸ್ ಜಾರಿಮಾಡಿದೆ. ಬಡ ರೈತರನ್ನು ಒಕ್ಕಲೆಬ್ಬಿಸುವ ಸರ್ಕಾರದ ಕ್ರಮ ಸರಿಯಲ್ಲ ಎಂದು ಕಿಡಿಕಾರಿದರು.