ಮುಂಬೈ : ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಸರತ್ತು ನಡೆಸಿದ್ದು, ಈ ಸಂಬಂಧ ಬಿಜೆಪಿ ನಾಯಕರು ಅರ್.ಎಸ್.ಎಸ್ ಮುಖಂಡರ ಜತೆ ಚರ್ಚೆ ನಡೆಸಿದ್ದಾರೆ.
ಮಹಾರಾಷ್ಟ್ರ ಚುನಾವಣೆ ವೇಳೆ 25 ವರ್ಷಗಳ ಮೈತ್ರಿ ಕಡಿದುಕೊಂಡು ಪ್ರತ್ಯೇಕವಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಹಾಗೂ ಶಿವಸೇನೆ ಮತ್ತೆ ಒಂದಾಗಿ ಸರ್ಕಾರ ರಚಿಸುವ ನಿಟ್ಟಿನಲ್ಲಿ ಮತ್ತಷ್ಟು ಹತ್ತಿರವಾಗಿದೆ. ಶಿವಸೇನೆ ಮೈತ್ರಿ ಕುರಿತು ಕೆಲ ಷರತ್ತುಗಳನ್ನು ಹಾಕಿದ್ದು, ಬಿಜೆಪಿ ನಾಯಕರು ಅರ್.ಎಸ್.ಎಸ್ ಮುಖಂಡರ ಜತೆ ಚರ್ಚೆ ನಡೆಸಿದ್ದಾರೆ.
ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅ.26ರಂದು ಎನ್.ಡಿ.ಎ ಕೂಟದ ಸಂಸದರಿಗೆ ಆಯೋಜಿಸಿರುವ ಲಘು ಉಪಹಾರ ಕೂಟಕ್ಕೆ ಶಿವಸೇನೆಯ ಎಲ್ಲಾ 18 ಸಂಸದರೂ ಹಾಜರಾಗಲು ನಿರ್ಧರಿಸಿದ್ದಾರೆ. ಮತ್ತೊಂದೆಡೆ ಬಿಜೆಪಿ ಜತೆಗೂಡಿ ಸರ್ಕಾರ ರಚಿಸಲು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಅತ್ಯಂತ ಉತ್ಸುಕರಾಗಿದ್ದಾರೆ ಎಂದು ಅವರನ್ನು ಭೇಟಿಯಾದ ಬಳಿಕ ಆರ್ ಪಿಐ ನಾಯಕ ರಾಮದಾಸ್ ಅಠಾವಳೆ ಘೋಷಿಸಿದ್ದಾರೆ.
ಈ ಬೆಳವಣಿಗೆಯನ್ನು ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರುವುದರ ದ್ಯೋತಕ ಎಂದು ವಿಶ್ಲೇಶಿಸಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕುರಿತು ಮಹತ್ವದ ಚರ್ಚೆ ನಡೆಸಲು ಅ.27ರಂದು ಬಿಜೆಪಿ ವೀಕ್ಷಕರಾಗಿ ರಾಜನಾಥ್ ಸಿಂಗ್ ಹಾಗೂ ಜೆ.ಪಿ.ನಡ್ಡಾ ಆಗಮಿಸಲಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಅಂತಿಮ ಸಿದ್ಧತೆ ನಡೆಸಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಬಿಜೆಪಿ ಘಟಕ ಅಧ್ಯಕ್ಷ ದೇವೇಂದ್ರ ಫಡ್ನವಿಸ್ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಸರ್ಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಆರ್.ಎಸ್.ಎಸ್ ಮುಖ್ಯಸ್ಥರನ್ನು ಭೇಟಿಯಾಗಿದ್ದಾರೆ.
ತಮ್ಮ ನಿವಾಸದಿಂದ ಸ್ಕೂಟರ್ ನಲ್ಲಿ ಹೊರಟ ನಿತಿನ್ ಗಡ್ಕರಿ ನಾಗ್ಪುರದಲ್ಲಿ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸುತ್ತಿದ್ದಾರೆ. ಶಿವಸೇನೆ ಕೆಲ ಷರತ್ತುಗಳನ್ನು ಹಾಕಿದ್ದು, ಈ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.