ಬೆಂಗಳೂರು : ಬೇಡಿಕೆ ಈಡೇರಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳೊಂದಿಗೆ ಮಾತುಕತೆ ಯಶಸ್ವಿಯಾಗಿದ್ದು ಸೋಮವಾರದಿಂದ ಪ್ರತಿಭಟನೆ ನಡೆಸುತ್ತಿದ್ದ ಸರ್ಕಾರಿ ವೈದ್ಯರು ಮುಷ್ಕರ ವಾಪಸ್ ಪಡೆದಿದ್ದಾರೆ.
14 ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರು ಸೋಮವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಸರ್ಕಾರ ಇದಕ್ಕೆ ಸರಿಯಾಗಿ ಪ್ರತಿಕ್ರಿಯಿಸದ ಹಿನ್ನಲೆಯಲ್ಲಿ ಸಾಮೂಹಿಕ ರಾಜಿನಾಮೆ ನೀಡಿದ್ದರು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಿದ್ದರಾಮಯ್ಯ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು, ವೈದ್ಯರು ಇಟ್ಟಿದ್ದ 14 ಬೇಡಿಕೆಗಳಲ್ಲಿ 10 ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರ ಸಮ್ಮತಿಸಿದೆ.
ವೈದ್ಯಾಧಿಕಾರಿಗಳೊಂದಿಗೆ ನಡೆದ ಮಾತುಕತೆ ಯಶಸ್ವಿಯಾಗಿದ್ದು, ಇನ್ನು ಮುಂದೆ ವೈದ್ಯಾಧಿಕಾರಿಗಳು ಈ ರೀತಿ ಮುಷ್ಕರ ಕೈಗೊಳ್ಳಬಾರದು. ಏನೇ ಇದ್ದರೂ ಮಾತಿನ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಎಂದು ಸಭೆ ಬಳಿಕ ಸಿದ್ದರಾಮಯ್ಯ ವೈದ್ಯರಿಗೆ ಎಚ್ಚರಿಕೆ ನೀಡಿದ್ದಾರೆ.
3 ವರ್ಷ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಿದ ವೈದ್ಯರನ್ನು ಖಾಯಂಗೊಳಿಸುವುದು ನರ್ಸ್ಗಳ ನೇಮಕ. ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.