ನವದೆಹಲಿ : ಜೈಲಿನಿಂದ ಬಿಡುಗಡೆ ಮಾಡಲು ಕೋರಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಯ ಅಪರಾಧಿಗಳಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಸಿ ಫೆ.18ರಂದು ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಇದನ್ನೇ ಮುಂದಿಟ್ಟುಕೊಂಡಿದ್ದ ತಮಿಳುನಾಡು ಸರ್ಕಾರ, ರಾಜೀವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಏಳೂ ಅಪರಾಧಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿತ್ತು.
ತಮಿಳುನಾಡು ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಆರೋಪಿಗಳ ಬಿಡುಗಡೆಗೆ ತಡೆ ನೀಡಿತ್ತು. ಏತನ್ಮಧ್ಯೆ ಈಗಾಗಲೇ ಜೀವಾವಧಿ ಶಿಕ್ಷೆಗಿಂತಲೂ ಹೆಚ್ಚು ಶಿಕ್ಷೆಯನ್ನು ಅನುಭವಿಸಿರುವುದರ ಹಿನ್ನೆಲೆಯಲ್ಲಿ ತಮ್ಮನ್ನು ಬಿಡುಗಡೆ ಮಾಡಬೇಕೆಂದು ಅಪರಾಧಿ ನಳಿನಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಪ್ರಸ್ತುತ ರಾಜೀವ್ ಗಾಂಧಿ ಹತ್ಯೆ ಪ್ರಕರಣ ಸಂಬಂಧ ನಳಿನಿ ಸೇರಿದಂತೆ 7 ಆರೋಪಿಗಳು ತಮಿಳುನಾಡಿನ ವೆಲ್ಲೂರಿನ ಜೈಲಿನಲ್ಲಿದ್ದಾರೆ.