ನವದೆಹಲಿ : ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಬಹುದು ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಗೆ ಸೂಚನೆ ನೀಡಿದ್ದಾರೆ.
ಬಿಜೆಪಿ ಸರ್ಕಾರ ರಚನೆಗೆ ರಾಷ್ಟ್ರಪತಿ ಸೂಚನೆ ಹಿನ್ನಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಸರ್ಕಾರ ರಚನೆಗೆ ಬಿಜೆಪಿಗೆ ಆಹ್ವಾನ ನೀಡುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಬಿಜೆಪಿ ನಾಯಕರ ಅಭಿಪ್ರಾಯ ಕೇಳಲಿದ್ದಾರೆ.
ಈ ನಡುವೆ ದೆಹಲಿ ವಿಧಾನಸಭೆ ವಿಸರ್ಜನೆ ಮಾಡುವಂತೆ ಕೋರಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ಅ.28ರಂದು ನಡೆಯಲಿದೆ. ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಸರ್ಕಾರ ರಚನೆ ಸಂಬಂಧ ಬಿಜೆಪಿ ಅಭಿಪ್ರಾಯ ಕೇಳುವ ನಿರೀಕ್ಷೆಯಿದೆ.
ಈ ಬೆಳವಣಿಗೆ ಹಿನ್ನಲೆಯಲ್ಲಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದು, ಬಿಜೆಪಿಗೆ ಸ್ಪಷ್ಟ ಬಹುಮತವಿಲ್ಲ, ಹೀಗಾಗಿ ದೆಹಲಿಯಲ್ಲಿ ಸರ್ಕಾರ ರಚನೆಗೆ ಬಿಜೆಪಿಗೆ ಅವಕಾಶ ನೀಡಬಾರದು ಎಂದು ನಜೀಬ್ ಜಂಗ್ ಅವರನ್ನು ಒತ್ತಾಯಿಸಿದ್ದಾರೆ.