ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಆಯ್ಕೆಯಾಗುತ್ತಿದ್ದಂತೆಯೇ ಶಿವಸೇನೆ ಸರ್ಕಾರ ರಚನೆಯಲ್ಲಿ ಭಾಗವಹಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಆಂತರಿಕ ಚರ್ಚೆ ಆರಂಭಿಸಿದ್ದು, ಈ ಕುರಿತು ಅ.30ರಂದು ನಿರ್ಧಾರ ಕೈಗೊಳ್ಳಲಿದೆ.
ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಹಲವು ಸುತ್ತಿನ ಮಾತುಕತೆ ಈಗಾಗಲೇ ನಡೆದಿದೆಯಾದರೂ ಒಮ್ಮತದ ನಿರ್ಧಾರಕ್ಕೆ ಬರುವಲ್ಲಿ ಪಕ್ಷದ ನಾಯಕರು ವಿಫಲರಾಗಿದ್ದಾರೆ. ಈ ಹಿನ್ನಲೆಯಲ್ಲಿ ಅ.30ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದ್ದು, ಬಿಜೆಪಿ ನೇತೃತ್ವದ ಸರ್ಕಾರ ಸೇರುವ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದು ಸಂಜಯ್ ರಾವುತ್ ತಿಳಿಸಿದ್ದಾರೆ.
ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಚುನಾವಣಾ ಪ್ರಚಾರದ ವೇಳೆ ಮನಬಂದಂತೆ ಹೇಳಿಕೆ ನೀಡಿದ್ದು, ಈ ಬಗ್ಗೆ ಖುದ್ದು ಠಾಕ್ರೆ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದೆ.
ಅ.31ರಂದು ಮುಂಬೈನ ವಾಂಖಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಪ್ರಮಾಣ ವಚನ ಸಮಾರಂಭಕ್ಕೆ ಆಗಮಿಸುವಂತೆ ಶಿವಸೇನೆ ನಾಯಕ ಉದ್ಧವ್ ಠಾಕ್ರೆ, ಎನ್ ಸಿಪಿ ನಾಯಕ ಶರದ್ ಪವಾರ್, ಎಂ.ಎನ್.ಎಸ್ ನಾಯಕ ರಾಜ್ ಠಾಕ್ರೆ ಗೆ ಬಿಜೆಪಿ ಆಹ್ವಾನ ನೀಡಿದೆ. ಈ ಮೂವರೂ ನಾಯಕರಿಗೂ ಸ್ವತ: ಫಡ್ನವಿಸ್ ಅವರೇ ಆಹ್ವಾನ ನೀಡಿದ್ದಾರೆ ಎಂದು ತಿಳಿದುಬಂದಿದೆ.