ಬೆಂಗಳೂರು : ಕೆಲ ಬಿಜೆಪಿ ನಾಯಕರು ರೂಪಿಸಿದ್ದ ಉದ್ದೇಶಿತ ಗಲಭೆಯನ್ನು ಹತ್ತಿಕ್ಕಿರುವುದರಿಂದ ಅವರಿಗೆ ಕಾಂಗ್ರೆಸ್ ಸರ್ಕಾರದ ಮೇಲೆ ಅಸಹನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದು ಗೃಹ ಸಚಿವ ಕೆ.ಜೆ ಜಾರ್ಜ್ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರ ಬಗ್ಗೆ ಬಿಜೆಪಿ, ರಾಜ್ಯಪಾಲರಿಗೆ ಸರ್ಕಾರದ ವಿರುದ್ಧ ದೂರು ನೀಡುವುದರ ಬಗ್ಗೆ ಅ.30ರಂದು ಪತ್ರಿಕಾಗೋಷ್ಠಿಯಲ್ಲಿ ಕೆ.ಜೆ ಜಾರ್ಜ್ ಪ್ರತಿಕ್ರಿಯಿಸಿದ್ದಾರೆ. ಕೆಲ ಬಿಜೆಪಿ ನಾಯಕರು, ನೈತಿಕ ಪೊಲೀಸ್ ಗಿರಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಉದ್ದೇಶಿತ ಗಲಭೆ ನಡೆಸಲು ಸಂಚು ರೂಪಿಸಿದ್ದರು. ಗಲಭೆಗಳು ನಡೆಯದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮೇಲೆ ಅಸಹನೆ ಉಂಟಾಗಿದ್ದು, ರಾಜಕೀಯ ದುರುದ್ದೇಶದಿಂದ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ನಿರ್ಭಯ ಪ್ರಕರಣದ ನಂತರ ಎಲ್ಲಾ ರಾಜ್ಯಗಳಲ್ಲೂ ಅತ್ಯಾಚಾರ ವರದಿಗಳು ಹೆಚ್ಚುತ್ತಿದೆ. ನಾನು ಎಲ್ಲಾ ಜಿಲ್ಲೆಗಳಲ್ಲೂ ಪ್ರವಾಸ ಕೈಗೊಂಡಿದ್ದೇನೆ ಆದರೆ ಎಲ್ಲೂ ಕಾನೂನು ಹದಗೆಟ್ಟಿಲ್ಲ ಎಂದು ಜಾರ್ಜ್ ಸಮರ್ಥಿಸಿಕೊಂಡಿದ್ದಾರೆ.
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಬಿಜೆಪಿ ಒತ್ತಾಯಕ್ಕೆ ತಿರುಗೇಟು ನೀಡಿರುವ ಗೃಹ ಸಚಿವರು, ನನಗೆ ಗೃಹ ಸಚಿವ ಸ್ಥಾನದ ಮೇಲೆ ಆಸೆ ಇಲ್ಲ, ನನ್ನನ್ನು ಪದಚ್ಯುತಿಗೊಳಿಸುವುದು ಸಿದ್ದರಾಮಯ್ಯ ಅವರಿಗೆ ಬಿಟ್ಟ ವಿಚಾರವೇ ಹೊರತು ವಿರೋಧ ಪಕ್ಷಗಳು ನನ್ನನ್ನು ಹುದ್ದೆಯಿಂದ ಇಳಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.